ಬೆಳಗಾವಿಯಲ್ಲಿ ಪ್ರೇಮಿಗಳು ಪರಾರಿ: ಮಗನ ಮೇಲಿನ ಸಿಟ್ಟಿಗೆ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ
ಬೆಳಗಾವಿ, ಡಿಸೆಂಬರ್ 11: ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದ ಯುವತಿಯೋರ್ವಳು ಮನೆಯವರು ಆಕೆಯ ಮದುವೆಯ ನಿಶ್ಚಿತಾರ್ಥ ಸಿದ್ಧತೆಯಲ್ಲಿದ್ದಾಗ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಯುವತಿ ಮನೆಯವರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿದ ಘಟನೆ ನಡೆದಿದೆ.

ಕಳೆದ ಕೆಲ ವರ್ಷಗಳಿಂದ ಒಂದೇ ವಂಟಮುರಿ ಯುವಕ-ಯುವತಿಯರಾದ ದುಂಡಪ್ಪ ಹಾಗೂ ಪ್ರಿಯಾಂಕಾ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮನೆ ಬಿಟ್ಟು ಓಡಿ ಹೋಗಿದ್ದಾರೆ. ಆದರೆ ಭಾನುವಾರ ಯುವತಿಯ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಲ್ಲದೇ ಅಂದೇ ದಿನಾಂಕ ಮದುವೆ ನಿಗದಿ ಮಾಡಲು ಯುವತಿಯ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು.
ಮನೆಯಲ್ಲಿ ಸಂಭ್ರಮಕ್ಕೆ ಸಿದ್ಧತೆಯಾಗುತ್ತಿದ್ದರೆ ಇತ್ತ ಯುವತಿ ಪ್ರೀತಿಸಿದ ಯುವಕ ದುಂಡಪ್ಪ ಜೊತೆ ರಾತ್ರೋರಾತ್ರಿ ಮನೆ ಬಿಟ್ಟು ಊರಿಂದ ಪರಾರಿಯಾಗಿದ್ದಾರೆ. ಬೆಳಗ್ಗೆ ಯುವತಿ ಮನೆಯವರಿಗೆ ಆಘಾತ ಎದುರಾಗಿದೆ. ಮಗಳು ಮನೆ ಬಿಟ್ಟು ಹೋಗಿರುವ ಕಾರಣ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಮನೆಯವರನ್ನು ಟಾರ್ಗೆಟ್ ಮಾಡಿದ್ದಾರೆ.
ಏಕಾಏಕಿ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ನಡೆಸಿ ರಾತ್ರೋರಾತ್ರಿ ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ಅಲ್ಲದೇ ಯುವಕನ ಅಜ್ಜಿ ಮತ್ತು ತಾಯಿಯ ಮೇಲೆ ಹಲ್ಲೆ ನಡೆಸಿ, ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಬಳಿಕ ಗ್ರಾಮದಲ್ಲಿನ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಎರಡೂ ಕುಟುಂಬಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಮಹಿಳೆ ಮೇಲಿನ ಹಲ್ಲೆಯ ವಿಚಾರ ತಿಳಿಯುತ್ತಿದ್ದಂತೆ ಕಾಕತಿ ಪೊಲೀಸರು ತಡರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಮನೆಬಿಟ್ಟು ಪರಾರಿಯಾಗಿರುವ ಯುವಕ, ಯುವತಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೊಸ ವಂಟಮುರಿ ಗ್ರಾಮದಲ್ಲಿ ನಾಗರಿಕ ಹಾಗೂ ಸಶಸ್ತ್ರ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಭೇಟಿ ನೀಡಿದ್ದಾರೆ.












Click it and Unblock the Notifications