ತಾವು ಓದಿದ ಶಾಲೆಗೆ ವೇತನದಿಂದ 10 ಲಕ್ಷ ರೂ. ದಾನ ನೀಡಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಸೆಪ್ಟೆಂಬರ್ 12: "ಮುಖ್ಯಮಂತ್ರಿ ಸಿದ್ಧರಾಮಯ್ಯ ತಾವು ಕಲಿತ ಸಿದ್ಧರಾಮನಹುಂಡಿಯಲ್ಲಿನ ಸರಕಾರಿ ಶಾಲೆಗೆ 10 ಲಕ್ಷ ರೂ. ಗಳನ್ನು ತಮ್ಮ ಸಂಬಳದಿಂದ ದಾನ ನೀಡಿದ್ದು ಎಲ್ಲಾ ಶಾಸಕ ಸಚಿವರುಗಳಿಗೆ ಪ್ರೇರಣೆಯಾಗಿದೆ. ದಾನಿಗಳು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಸಹಾಯ ಮಾಡಿದಲ್ಲಿ ನಮ್ಮ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ" ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಸಚಿವರು 'ನಮ್ಮಶಾಲೆ ನಮ್ಮ ಜವಾಬ್ದಾರಿ' ಕಾರ್ಯಕ್ರಮದ ಲೋಗೋವನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ, ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ" ಎಂದರು.

ಶಾಲೆಗಳ ಅಭಿವೃದ್ಧಿಗಾಗಿ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ ಮಾತನಾಡಿ, "ರಾಜ್ಯದಲ್ಲಿನ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ" ಎಂದರು.
"ಶಿಕ್ಷಕರು ತಮ್ಮ ಶಾಲೆಗೆ ಒಂದು ತಿಂಗಳ ಸಂಬಳವನ್ನು ದಾನವಾಗಿ ನೀಡಿದಲ್ಲಿ ಇತರರು ಪ್ರೇರಪಣೆಗೊಂಡು ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ರಾಜ್ಯದಲ್ಲಿ ಉತ್ತಮ ಶಿಕ್ಷಕರು ನಮ್ಮ ಸರಕಾರಿ ಶಾಲೆಯಲ್ಲಿದ್ದು ಪಾಲಕರು ತಮ್ಮ ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸುವದರ ಜೊತೆಗೆ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತುಕೊಂಡಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ" ಎಂದು ಅಭಿಪ್ರಾಯಪಟ್ಟರು.
"ರಾಜ್ಯದಲ್ಲಿ ಸರಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಅಂದಾಜು 56 ಲಕ್ಷ ವಿಧ್ಯಾರ್ಥಿಗಳಿದ್ದು ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ಅಂದಾಜು 1 ಕೋಟಿ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಮೂರು ಬಾರಿ ಅವಕಾಶ ನೀಡಲಾಗಿದ್ದು, ಈ ಅವಕಾಶದ ಸದುಪಯೋಗ ಪಡೆದುಕೊಂಡ 82 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಇಂದು ಕಾಲೇಜುಗಳಿಗೆ ಪ್ರವೇಶ ಪಡೆದಿರುತ್ತಾರೆ" ಎಂದು ಹೇಳಿದರು.
"ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವದು ಸರಕಾರದ ಧ್ಯೇಯವಾಗಿದ್ದು, ಈ ಹಿನ್ನಲೆಯಲ್ಲಿ ಅಜೀಂ ಪ್ರೇಂಜೀ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಮೊಟ್ಟೆಯನ್ನು ವಾರದ ಆರು ದಿನಗಳ ಕಾಲ ವಿತರಿಸುವ ಕಾರ್ಯಕ್ರಮಕ್ಕೆ ಸೆಪ್ಟೆಂಬರ್ 25ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು" ಎಂದು ತಿಳಿಸಿದರು.
"ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪ್ರಾರಭದಿಂದಲೇ ನೀಡುವ ಸದುದ್ದೇಶದೊಂದಿಗೆ 45 ಸಾವಿರ ಅತಿಥಿ ಶಿಕ್ಷಕರಿಗೆ ಶಾಲಾ ಪ್ರಾರಂಭಕ್ಕೆ ಮುನ್ನವೆ ನೇಮಕಾತಿ ಆದೇಶ ಪ್ರತಿಗಳನ್ನು ವಿತರಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಕಿ ರಾಜ್ಯ ಸರಕಾರದಿಂದ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ 1008 ಎಲ್.ಕೆ.ಜಿ., ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗಿದ್ದು ಕ್ರಮೇಣ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ವಹಿಸಲಾಗುವದು" ಎಂದು ಸಚಿವರು ವಿವರಿಸಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, "ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವದರ ಮೂಲಕ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನೀಡುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸಿಮಿತವಾಗದೇ ಪ್ರತಿಯೊಬ್ಬರು ಕೈಜೋಡಿಸಿದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಗೊಳಿಸಬಹುದಾಗಿದೆ. ನಮ್ಮ ಶಾಲೆ ನಮ್ಮಜವಾಬ್ದಾರಿ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೆ ಪಾಲಕರ, ಶಿಕ್ಷಕರ ಪಾತ್ರ ಮಹತ್ವಾದಾಗಿದ್ದು, ಶಿಕ್ಷಣದ ಜೊತೆಗೆ ತಾವು ಕಲಿತ ಶಾಲೆ, ತಮ್ಮ ಗ್ರಾಮದ ಬಗ್ಗೆ ಅಭಿಮಾನ ಹೊಂದುವಂತಹ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ" ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, "ಇದೊಂದು ಅರ್ಥಪೂರ್ಣವಾದಂತಹ ಕಾರ್ಯಕ್ರಮವಾಗಿದೆ. ಸಮಾಜ, ದೇಶ ಬೆಳೆಯಬೆಕಾದರೆ ಸರಕಾರ ಸ್ವಾಮ್ಯದ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಸರಕಾರ ಸಾಕಷ್ಟು ಮಹತ್ವಾಕಾಂಕ್ಷೆಗಳನ್ನಿಟ್ಟುಕೊಂಡು ಅನೇಕ ಯೋಜನೆಗಳನ್ನು ರೂಪಿಸುತ್ತದೆ. ಈ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು, ಸಾರ್ವಜನಿಕರು ಇದರಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು" ಎಂದು ಕರೆ ನೀಡಿದರು.












Click it and Unblock the Notifications