ನ. 16ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ
ಬೆಳಗಾವಿ, ನ. 15: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯಮಟ್ಟದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ನಗರದಲ್ಲಿ ಭಾನುವಾರ ನ. 16 ರಂದು ಏರ್ಪಡಿಸಿದೆ.
ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸಮಾರಂಭ ಉದ್ಘಾಟಿಸುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಆರ್. ರೋಷನ್ ಬೇಗ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಫಿರೋಜ್ ಸೇಠ್ ವಹಿಸುವರು. ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ. ಪೊನ್ನಪ್ಪ ಪ್ರಾಸ್ತಾವಿಕ ಮಾತನಾಡುವರು. ಜಿಲ್ಲೆಯ ಸಂಸದರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮಹಾಪೌರರು, ಹಾಗೂ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಚಾರ ಸಂಕಿರಣ: ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಿಮಿತ್ತ ಸಾರ್ವಜನಿಕ ವ್ಯವಹಾರಗಳಲ್ಲಿ ಪಾರದರ್ಶಕತೆ ಮಾಧ್ಯಮಗಳ ಪಾತ್ರ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತ ಈಶ್ವರ ದೈತೋಟ ಅವರು ಸಾರ್ವಜನಿಕ ವ್ಯವಹರಗಳಲ್ಲಿ ಪಾರದರ್ಶಕತೆ: ವಿದ್ಯುನ್ಮಾನ ಮಾಧ್ಯಮಗಳ ಪಾತ್ರ ಹಾಗೂ ಪತ್ರಕರ್ತ ಟಿ.ವಿ. ಶಿವಾನಂದನ್ ಅವರು ಸಾರ್ವಜನಿಕ ವ್ಯವಹಾರಗಳಲ್ಲಿ ಪಾರದರ್ಶತೆ: ಮುದ್ರಣ ಮಾಧ್ಯಮಗಳ ಪಾತ್ರ ಕುರಿತು ಮಾತನಾಡುವರು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರು, ಕಾರ್ಯದರ್ಶಿ ಎಸ್. ಶಂಕರಪ್ಪ ಹಾಗೂ ವಿಚಾರ ಸಂಕಿರಣದ ಸಂಚಾಲಕ ಡಾ. ಸರಜೂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.