Naviluteertha Dam: ತುಂಬುವ ಹಂತ ತಲುಪಿದ ನವೀಲುತೀರ್ಥ ಜಲಾಶಯ: ನೀರಿಟ್ಟ ಮಟ್ಟ ಎಷ್ಟಿದೆ?
Naviluteertha Dam: ಭಾರೀ ಮಳೆ ಹಿನ್ನೆಲೆ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನದಿ, ಕೆರೆ-ಕಟ್ಟೆಗಳು, ಜಲಾಶಯಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಹಾಗೆಯೇ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಜಲಾಶಯ ಭರ್ತಿಗೆ ಇನ್ನು ಕೇವಲ 3.50 ಅಡಿ ಮಾತ್ರ ಬಾಕಿಯಿದೆ.
ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಇರುವ ನವೀಲುತೀರ್ಥ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯದ ಒಟ್ಟು ನೀರಿನ ಸಂಗ್ರಹಣಾ ಸಾಮರ್ಥ್ಯ 2,079 ಅಡಿ ಇದ್ದು, ಇದೀಗ ಪ್ರಸ್ತುತ 2076.00 ಅಡಿಗೆ ತಲುಪಿದೆ. ಒಳಹರಿವು 19,000 ಕ್ಯೂಸೆಕ್ ಇದ್ದರೆ, ಹೊರಹರಿವು 15,000 ಕ್ಯೂಸೆಕ್ ಇದೆ.

ಮತ್ತೊಂದೆಡೆ ಮಳೆ ಬಿಟ್ಟು ಬಿಡದೇ ಸುರಿಯುತ್ತಿರುವ ಹಿನ್ನೆಲೆ ಇದೀಗ ಮಲಪ್ರಭಾ ನದಿ ಪಾತ್ರದ ಜನರಿಗೆ ಪ್ರವಾಹದ ಆತಂಕ ಎದುರಾಗಿದ.
ಮುಳುಗಿದ ಕೊಳ್ಳೇಗಾಲ ತಾಲ್ಲೂಕಿನ ಈ ಗ್ರಾಮಗಳು: ಕಾವೇರಿ ಆರ್ಭಟದಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನದಿಪಾತ್ರದ ಗ್ರಾಮಗಳು ತತ್ತರಿಸುತ್ತಿದ್ದು, 5 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, 2 ಗ್ರಾಮಗಳು ಸಂಪೂರ್ಣ ಜಲಾವೃತವಾಗಿದೆ.
ಕೊಳ್ಳೇಗಾಲದ ನದಿಪಾತ್ರದ ಗ್ರಾಮಗಳಾದ ಅಣಗಳ್ಳಿ, ದಾಸನಪುರ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಗ್ರಾಮಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ಕಾವೇರಿ ನದಿ ಭಾರೀ ಪ್ರಮಾಣದಲ್ಲಿ ಉಕ್ಕಿ ಹರಿಯುತ್ತಿದ್ದು, ದಾಸನಪುರ, ಅಣಗಳ್ಳಿ, ಹಂಪಾಪುರ, ಹರಳೆ, ಮುಳ್ಳೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು ಸ್ಥಳಕ್ಕೆ ಡಿಸಿ ಶಿಲ್ಪಾನಾಗ್ ಭೇಟಿ ಕೊಟ್ಟು ಪ್ರವಾಹ ನಿರ್ವಹಣೆ ಮಾಡುತ್ತಿದ್ದಾರೆ. ಕೊಳ್ಳೇಗಾಲದ ಶಿವನಸಮುದ್ರ ಸಮೀಪವಿರುವ ಐತಿಹಾಸಿಕ ವೆಸ್ಲಿ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. 2019ರಲ್ಲೂ ಭೀಕರ ಮಳೆಗೆ ವೆಸ್ಲಿ ಸೇತುವೆ ಒಂದು ಭಾಗ ಕೊಚ್ಚಿ ಹೋಗಿತ್ತು. ಬಳಿಕ, ದುರಸ್ತಿ ಮಾಡಲಾಗಿತ್ತು. ಈಗ, ಸೇತುವೆಯ ಮತ್ತೊಂದು ಭಾಗ ನೀರುಪಾಲಾಗಿದೆ.
ವಾಣಿ ವಿಲಾಸ ಸಾಗರಕ್ಕೆ ಭದ್ರಾ ಡ್ಯಾಂ ನೀರು: ಚಿತ್ರದುರ್ಗ ಜಿಲ್ಲೆಯ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಪ್ರತಿ ದಿನ 700 ಕ್ಯೂಸೆಕ್ನಂತೆ ನೀರು ಹರಿಸುವುದಾಗಿ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.
ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಜುಲೈ 30) ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಅನುದಾನ ಬಿಡುಗಡೆಗೆ ಆಗ್ರಹ: ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈ ಭಾಗದ ರೈತರ ಜೀವನಾಡಿಯಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಷ್ಟ್ರೀಯ ಮಹತ್ವದ ಯೋಜನೆಯನ್ನಾಗಿ ಘೋಷಿಸಿ 5,300 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿತ್ತು.
ಕೊಟ್ಟ ಆಶ್ವಾಸನೆಯನ್ನು ಉಳಿಸಿಕೊಂಡು ಶೀಘ್ರವೇ 5,300 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಒತ್ತಾಯಿಸಿದರು. ಇನ್ನು ಇತ್ತೀಚಿಗಷ್ಟೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಗರಕ್ಕೆ ಭೇಟಿ ನೀಡಿದಾಗ, ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಕೇಳಿದ ತಾಂತ್ರಿಕ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸಮರ್ಪಕವಾಗಿ ಉತ್ತರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು.
ಆದರೆ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಅವರು ಕಳೆದ ಜೂನ್ 29ರಂದು ನವದೆಹಲಿಯ ಜಲಶಕ್ತಿ ಮಂತ್ರಾಲಯದ ರಾಜ್ಯ ಯೋಜನೆಗಳ ಆಯುಕ್ತರೊಂದಿಗೆ ಚರ್ಚಿಸಿದಾಗ, ಯೋಜನೆಯಲ್ಲಿ ಯಾವುದೇ ಸಮಸ್ಯೆ ಹಾಗೂ ತಾಂತ್ರಿಕ ಅಸಮರ್ಪಕತೆಯಿಲ್ಲ ಎಂಬುದು ತಿಳಿದುಬಂದಿದೆ. ಕೇಂದ್ರ ಸರ್ಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಯಾವುದೇ ಆಕ್ಷೇಪಣೆ ಅಥವಾ ತಾಂತ್ರಿಕ ಅಸಮರ್ಪಕತೆಗಳ ಕುರಿತು ರಾಜ್ಯ ಸರ್ಕಾರಕ್ಕೂ ಯಾವುದೇ ಪತ್ರ ಸ್ವೀಕೃತವಾಗಿಲ್ಲ. ಆದಾಗ್ಯೂ 5,300 ಕೋಟಿ ರೂಪಾಯಿಯಲ್ಲಿ ಯಾವುದೇ ಅನುದಾನ ಇದುವರೆಗೂ ಬಿಡುಗಡೆಯಾಗಿಲ್ಲವೆಂದು ಡಿ.ಸುಧಾಕರ್ ಸ್ಪಷ್ಟಪಡಿಸಿದರು.
ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಎಲ್ಲಾ ಮಾನದಂಡಗಳನ್ನು ಭದ್ರಾ ಮೇಲ್ದಂಡೆ ಯೋಜನೆ ಪೂರೈಸಿರುವುದರಿಂದಲೇ ಜಲಶಕ್ತಿ ಮಂತ್ರಾಲಯದ 14ನೇ ಉನ್ನತ ಸಮಿತಿ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಲು ಶಿಘಾರಸ್ಸು ನೀಡಿತ್ತು. ಇದರ ಆಧಾರದ ಮೇಲೆಯೇ 2023-24ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ 5,300 ಕೋಟಿ ರೂಪಾಯಿ ಹಣಕಾಸಿನ ನೆರವು ಘೋಷಿಸಲಾಗಿತ್ತು. ಆದರೆ ಇದುವರೆಗೂ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಧನ ಸಹಾಯ ಬಿಡುಗಡೆಗೊಳ್ಳದೇ ಇರುವುದರಿಂದ ಯೋಜನೆ ಪ್ರಗತಿ ಕುಂಠಿತವಾಗಿದೆ ಎಂದರು.
ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರೂ, ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಅನುದಾನ ಲಭಿಸದಿರುವುದು ಬರ ಪೀಡಿತ ಜಿಲ್ಲೆಗೆ ದುರದೃಷ್ಟಕರ ಎನಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟದ ಮುಂದೆ ವಿಷಯ ಬಂದರೂ ಯಾವುದೇ ತೀರ್ಮಾನ ತೆಗದುಕೊಂಡಿಲ್ಲ ಎಂದು ಸಚಿವ ಡಿ.ಸುಧಾಕರ್ ಬೇಸರ ವ್ಯಕ್ತಪಡಿಸಿದರು.












Click it and Unblock the Notifications