ಬಿಪಿಎಲ್ ಕಾರ್ಡುದಾರರಿಗೆ ಆಘಾತ ನೀಡಿದ ರಾಜ್ಯ ಸರ್ಕಾರ
ಬೆಳಗಾವಿ, ಫೆಬ್ರವರಿ 15: ಸತತ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕೆಳವರ್ಗ, ಕೆಳಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್ಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಸಮಯ ನೀಡಲಾಗುತ್ತದೆ ಎಂದು ಅವರು ಬೆಳಗಾವಿಯಲ್ಲಿ ಹೇಳಿದ್ದಾರೆ.
ಹಾಗೆಯೇ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷಕ್ಕಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ಹಿಂಪಡೆಯುತ್ತದೆ ಎಂದಿದ್ದಾರೆ.
ದಂಡ ಹಾಗೂ ಶಿಕ್ಷೆ
ಏಪ್ರಿಲ್ ಬಳಿಕ ಸರ್ಕಾರ ಬಿಪಿಎಲ್ ಕಾರ್ಡುದಾರರ ಪರಿಶೀಲನೆ ನಡೆಸಲಿದೆ. ಒಂದು ವೇಳೆ ಈ ಎಲ್ಲ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದಾರೆ.
ಆಧಾರ್ ದೃಢೀಕರಣ ಮೂಲಕ ಪತ್ತೆ
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು 15 ದಿನಗಳ ಒಳಗೆ ಅದನ್ನು ಹಿಂದಿರುಗಿಸಬೇಕು. ನಿಗದಿತ ಸಮಯದಲ್ಲಿ ಕಾರ್ಡ್ಗಳನ್ನು ವಾಪಸ್ ನೀಡದವರನ್ನು ಆಧಾರ್ ದೃಢೀಕರಣದ ಮೂಲಕ ಪತ್ತೆ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉಪನಿರ್ದೇಶಕರಿಗೆ ಉಮೇಶ್ ಕತ್ತಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಾರ್ಡ್ ವಾಪಸ್ಗೆ ಕಡೆಯ ಅವಕಾಶ
ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಆಹಾರ ಧಾನ್ಯಗಳನ್ನು ಒದಗಿಸಲು ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಆದರೆ ಆರ್ಥಿಕವಾಗಿ ಸದೃಢರಾಗಿರುವ ಕುಟುಂಬದವರು ಕೂಡ ಸುಳ್ಳು ಮಾಹಿತಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಅಂತಹವರಿಗೆ ಕಾರ್ಡ್ ವಾಪಸ್ ನೀಡಲು ಅವಕಾಶ ಕೊಡಲಾಗಿತ್ತು. ಶೇ 55-60ರಷ್ಟು ಮಂದಿ ಮಾತ್ರ ಕಾರ್ಡ್ ಹಿಂದಿರುಗಿಸಿದ್ದಾರೆ. ಈಗ ಉಳಿದವರಿಗೆ ಕಡೆಯ ಅವಕಾಶ ನೀಡಲಾಗಿದೆ.
ಅಕ್ಕಿ ಜತೆ ರಾಗಿ ಮತ್ತು ಜೋಳ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿನ ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿಯ ಜತೆಗೆ ಜೋಳ ಹಾಗೂ ದಕ್ಷಿಣದ ರಾಜ್ಯಗಳಿಗೆ ಅಕ್ಕಿಯ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಏಪ್ರಿಲ್ 1ರಿಂದ ಎರಡು ಕೆಜಿ ಅಕ್ಕಿ ಜತೆಗೆ ಮೂರು ಕೆಜಿ ಜೋಳವನ್ನು ಉತ್ತರದ 15 ಜಿಲ್ಲೆಗಳಿಗೆ ನೀಡಿದರೆ, ದಕ್ಷಿಣದ ಜಿಲ್ಲೆಗಳಿಗೆ ಎರಡು ಕೆಜಿ ಅಕ್ಕಿಯೊಂದಿಗೆ ಮೂರು ಕೆಜಿ ರಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.