ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ ಎಂದ ಸತೀಶ್ ಜಾರಕಿಹೊಳಿ
ಬೆಳಗಾವಿ, ಏಪ್ರಿಲ್ 19: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ಡೌನ್ ಜಾರಿಗೊಳಿಸಬಾರದು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ಗೋಕಾಕ್ ನಗರದ ಹಿಲ್ ಗಾರ್ಡನ್ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಲಾಕ್ಡೌನ್ ಮಾಡುವುದರಿಂದ ಏನು ಆಗುವುದಿಲ್ಲ. ಆದ್ದರಿಂದ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.
ಬೆಂಗಳೂರಲ್ಲಿ ಕೋವಿಡ್ ಪರಿಸ್ಥಿತಿ; ಲಾಕ್ ಡೌನ್ ಜಾರಿಗೆ ವಿರೋಧ
ರಾಜ್ಯ ಸರ್ಕಾರಕ್ಕೆ ಮೊದಲಿನಿಂದಲೂ ಕೊರೊನಾ ಬಗ್ಗೆ ಗೊಂದಲವಿದೆ. ಕೋವಿಡ್ ಕುರಿತು ಸರಿಯಾದ ಮಾಹಿತಿ ಇಲ್ಲ. ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಕೋವಿಡ್ ನಿಯಂತ್ರಣ ಮಾಡಬೇಕು ಎಂದು ತಿಳಿಸಿದರು.
ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಕರ್ತವ್ಯ. ಅವರ ಮೇಲೆ ಒತ್ತಡ ಹೇರುವುದು, ಕೆಲಸದಿಂದ ತೆಗೆದು ಹಾಕುವುದು, ಬೇದರಿಸುವುದು ಮಾಡಬಾರದು, ಸಾರಿಗೆ ನೌಕರರ ಮುಖಂಡರನ್ನು ಕರೆದು ಸಭೆ ನಡೆಸಿ, ಚರ್ಚೆ ಮಾಡಬೇಕೆಂದರು.
ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸುಮಾರು 10 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ಪ್ರಿಯಾಂಕಾ, ರಾಹುಲ್, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಲಾಗುವುದಿಲ್ಲ. ಆದರೆ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.