ಉತ್ತರ ಕರ್ನಾಟಕ ಬಂದ್ : ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತ
ಬೆಳಗಾವಿ, ಡಿಸೆಂಬರ್ 27 : ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಉತ್ತರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಬೆಳಗಾವಿಯಿಂದ ವಿವಿಧ ಜಿಲ್ಲೆಗಳಿಗೆ ಸಾಗುವ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ. ಬಸ್ಸುಗಳು ಡಿಪೋದಲ್ಲಿಯೇ ಉಳಿದಿವೆ. ಖಾಸಗಿ ಬಸ್ ಸಂಚಾರ ಸಹ ಸ್ಥಗಿತಗೊಂಡಿದ್ದು, ಜನರು ಪರದಾಡುತ್ತಿದ್ದಾರೆ.

ಸವದತ್ತಿಯಲ್ಲಿ ಇಂದು ಸಂತೆ ಇದೆ. ಆದ್ದರಿಂದ, ರೈತರ ವಾಹನಗಳು ತೆರಳಲು ಅನುಮತಿ ನೀಡಲಾಗಿದೆ. ಹುಬ್ಬಳ್ಳಿ, ಧಾರವಾಡ, ಗದಗದಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚನ್ನಮ್ಮ ವೃತ್ತದಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ತನಕ ರೈತರ ಪ್ರತಿಭಟನಾ ಜಾಥಾ ನಡೆಯಲಿದೆ. ಚನ್ನಮ್ಮ ವೃತದಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ, ವಾಹನ ಸಂಚಾರವನ್ನು ತಡೆಯಲಾಗಿದೆ.
ಚನ್ನಮ್ಮ ವೃತ್ತದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೇಳಿಕೆ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ಸವದತ್ತಿ ತಾಲೂಕಿನ ಯರಗಟ್ಟಿ, ಮುನವಳ್ಳಿ, ಹೂಲಿಕಟ್ಟಿ, ಹಂಚನಾಳ, ಉಗರಗೋಳ ಮತ್ತು ಹೂಲಿ ಗ್ರಾಮಗಳು ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ರಸ್ತೆ ತಡೆ ನಡೆಸಿ,ವಿವಿಧ ರೈತ ಸಂಘಟನೆಗಳ ಸದಸ್ಯರು ಮತ್ತು ಸವದತ್ತಿ ತಾಲೂಕಾ ಜೆಡಿಎಸ್ ಕಾರ್ಯಕರ್ತರು ಬಂದ್ಗೆ ಬೆಂಬಲ ನೀಡಿದ್ದಾರೆ.
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಬಳಿ ಟಾಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಕರ್ನಾಟಕ ನವ ನಿರ್ಮಾಣ ಸೇನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಗೋವಾ ಮತ್ತು ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications