"ಕೊರೊನಾ ತಡೆಗೆ ಅಧಿಕಾರಿಗಳು ಇನ್ನಷ್ಟು ಕಾರ್ಯಪ್ರವೃತ್ತರಾಗಬೇಕು"
ಬೆಳಗಾವಿ, ಸೆಪ್ಟೆಂಬರ್ 04: ಪ್ರತಿ ತಾಲೂಕಿನ ಕೋವಿಡ್-19 ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.
Recommended Video
ಕೋವಿಡ್-19 ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. "ಪ್ರತಿ ಮೂರು ನಾಲ್ಕು ವರ್ಷಗಳಲ್ಲಿ ಹೊಸ ಹೊಸ ರೋಗಗಳು ಹರಡುತ್ತವೆ. ಆದರೆ ಆ ರೋಗಗಳಿಗೆ ಹೋಲಿಸಿದರೆ ಕೊರೊನಾ ವೈರಸ್ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಸೋಂಕು ಸ್ವಲ್ಪ ಹತೋಟಿಗೆ ಬಂದಿದೆ. ಜನರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಹೆದರುವ ಅವಶ್ಯಕತೆ ಇಲ್ಲ" ಎಂದರು.
"ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮ ಮಟ್ಟದಲ್ಲಿ ಸೋಂಕು ಹರಡುವ ಪ್ರಮಾಣ ಕಡಿಮೆ ಆಗುತ್ತಿದೆ. ಸೋಂಕು ತಡೆಗೆ ಗ್ರಾಮೀಣ ಮಟ್ಟದಲ್ಲಿ ಜನರು ಸಹಕರಿಸಿದರು" ಎಂದು ಶ್ಲಾಘಿಸಿದರು. "ಕೊರೊನಾ ಸದ್ಯಕ್ಕೆ ಹತೋಟಿಗೆ ಬಂದಿದೆ. ಅದಾಗ್ಯೂ ಅಧಿಕಾರಿಗಳು ಇನ್ನೂ ಹೆಚ್ಚು ಕೆಲಸ ಮಾಡಬೇಕು. 15 ದಿನಗಳ ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಬೇರೆ ಬೇರೆ ರೋಗಿಗಳಿಗೆ ಚಿಕಿತ್ಸೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ" ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಈ ಬಾರಿ ಪ್ರವಾಹದಿಂದ ಸಮಸ್ಯೆ ಇಲ್ಲ: ಪ್ರವಾಹದಿಂದ ಈ ಬಾರಿ ಸಮಸ್ಯೆ ಆಗಿಲ್ಲ. ಆದರೂ ರೈತರಿಗೆ ಬೆಳೆ ಪರಿಹಾರ ನೀಡಲು ಜಂಟಿಯಾಗಿ ಬೆಳೆ ಸಮೀಕ್ಷೆ ಮಾಡಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಪ್ರವಾಹದಿಂದ 1,160 ಕೋಟಿ ನಷ್ಟ ಆಗಿದ್ದು, ಪ್ರವಾಹದ ಸಮೀಕ್ಷೆಗೆ ಕೇಂದ್ರ ತಂಡ ಭೇಟಿ ನೀಡಲಿದೆ. ಸದ್ಯದ ಮಟ್ಟಿಗೆ ಪ್ರವಾಹ ನಿಯಂತ್ರಣದಲ್ಲಿದೆ. ರೈತರಿಂದ ಬೆಳೆ ಸಮೀಕ್ಷೆ ನಡೆಯುತ್ತಿದ್ದು, ರಾಜ್ಯದಲ್ಲಿ ಜಿಲ್ಲೆಯ ರೈತರು ಹೆಚ್ಚು ಸಮೀಕ್ಷೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಚಿವರಿಗೆ ತಿಳಿಸಿದರು.












Click it and Unblock the Notifications