"ಮಲಪ್ರಭಾ, ಘಟಪ್ರಭಾ ನದಿಗಳ ಒತ್ತುವರಿ ತಡೆಗೆ ಶಾಶ್ವತ ಯೋಜನೆ"
ಬೆಳಗಾವಿ, ಸೆಪ್ಟೆಂಬರ್ 19: ಮಲಪ್ರಭಾ, ಘಟಪ್ರಭಾ ನದಿ ತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿ ತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹಕ್ಕೆ ಪ್ರಮುಖ ಕಾರಣ ನದಿ ತೀರದ ಒತ್ತುವರಿ. ನದಿಗಳು ಸರಾಗವಾಗಿ ಹರಿಯಲು ಅವಕಾಶ ನೀಡಬೇಕಿದೆ. ಆದ್ದರಿಂದ ಮೊದಲು ಸಮೀಕ್ಷೆ ಆಗಲಿ ನಂತರ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅನುಮೋದನೆ ನಂತರ ಮೇಕೆದಾಟು ಅಣೆಕಟ್ಟು ನಿರ್ಮಾಣ; ರಮೇಶ್ ಜಾರಕಿಹೊಳಿ
ಒತ್ತುವರಿಗೆ ಶಾಶ್ವತ ಪರಿಹಾರ
ನದಿ ತೀರಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಶಾಶ್ವತ ಯೋಜನೆ ರೂಪಿಸಿ ಸರಕಾರದಿಂದ ಅಗತ್ಯ ಹಣಕಾಸಿನ ನೆರವು ಪಡೆದುಕೊಳ್ಳಲಾಗುವುದು.
ಸಮೀಕ್ಷೆ ಬಳಿಕ ಸಂಬಂಧಿಸಿದ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸಮಗ್ರ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.ಸಮೀಕ್ಷೆ ಕಾರ್ಯದ ನಂತರ ಕ್ರಮ
ಇದೇ ವೇಳೆ ಮಾತನಾಡಿದ ವಿಧಾನ ಸಭೆಯ ಉಪ ಸಭಾಪತಿ ಆನಂದ ಮಾಮನಿ ಅವರು, ಮೊದಲು ನದಿಗಳ ಒತ್ತುವರಿ ಬಗ್ಗೆ ಸಮೀಕ್ಷೆ ಮಾಡಿ ಗುರುತು ಮಾಡಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸುವುದು ಸೂಕ್ತ ಎಂದರು. ನದಿ ತೀರದ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ಮೊದಲು ಗಮನಹರಿಸಬೇಕು ಎಂದು ಹೇಳಿದರು.
"ಕೊರೊನಾ ತಡೆಗೆ ಅಧಿಕಾರಿಗಳು ಇನ್ನಷ್ಟು ಕಾರ್ಯಪ್ರವೃತ್ತರಾಗಬೇಕು"
"ಇನ್ನೂ ಒತ್ತುವರಿ ಬಿಟ್ಟಿಲ್ಲ"
ನದಿಪಾತ್ರದ ಒತ್ತುವರಿ ಕುರಿತು ಸಭೆಗೆ ಮಾಹಿತಿ ನೀಡಿದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಮಳೆಗಾಲದಲ್ಲಿ ಪ್ರವಾಹ ಸಾಧ್ಯತೆ ಇರುವುದರಿಂದ ನದಿ ತೀರದ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಪ್ರಕರಣವೊಂದರಲ್ಲಿ ಹೈಕೋರ್ಟ್ ಆದೇಶ ನೀಡಿದೆ. ಆದರೂ ಒತ್ತುವರಿ ಮಾಡಿಕೊಳ್ಳುವುದು ಬಿಟ್ಟಿಲ್ಲ. ಕಾನೂನು ಪ್ರಕಾರ ನದಿ ಹಾಗೂ ನದಿ ದಂಡೆ ಸರ್ಕಾರದ ಆಸ್ತಿಯಾಗಿದೆ. ಯಾರಾದರೂ ಮನೆ ಕಟ್ಟಿದರೆ ಅಥವಾ ಸಾಗುವಳಿ ಮಾಡುವುದು ಅತಿಕ್ರಮಣ ಎಂದು ಭಾವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ವೈಜ್ಞಾನಿಕ ಸಮೀಕ್ಷೆಗೆ ಒತ್ತು
ಮನೆ ಕಟ್ಟಿರುವ ಬಡವರಿಗೆ ನಿರಾಶ್ರಿತರು ಎಂದು ಪರಿಗಣಿಸಿ ಪುನರ್ವಸತಿ ಕಲ್ಪಿಸಬಹುದು. ಇದರಿಂದ ಕಾನೂನು ತೊಡಕು ಎದುರಾಗುವುದನ್ನು ತಪ್ಪಿಸಬಹುದು ಎಂದೂ ಸಲಹೆ ನೀಡಿದರು. ಡ್ರೋನ್ ಮತ್ತಿತರ ಸೌಲಭ್ಯ ಬಳಸಿಕೊಂಡು ವೈಜ್ಞಾನಿಕವಾಗಿ ಒತ್ತುವರಿ ಸಮೀಕ್ಷೆ ನಡೆಸಬೇಕಿದೆ. ಒತ್ತುವರಿ ತೆರವು ಜತೆಗೆ ನದಿಯ ಹೂಳೆತ್ತುವ ಕೆಲಸಕ್ಕೆ ಆದ್ಯತೆ ನೀಡಬೇಕಿದೆ ಎಂದು ಬಿಸ್ವಾಸ್ ವಿವರಿಸಿದರು.