"ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ವೈಯಕ್ತಿಕವಾಗಿ ಆಸಕ್ತಿ ಇಲ್ಲ''
ಬೆಳಗಾವಿ, ನವೆಂಬರ್ 26: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ವೈಯಕ್ತಿಕವಾಗಿ ಆಸಕ್ತಿ ಇಲ್ಲವೆಂದರು.
ವೈಯಕ್ತಿಕವಾಗಿ ಲೋಕಸಭೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ, ರಾಜ್ಯದಲ್ಲಿ ಇನ್ನೂ ಬೇರೆ ಬೇರೆ ಕೆಲಸಗಳಿದ್ದು, ಸ್ಥಳೀಯ ರಾಜಕಾರಣದಲ್ಲಿ ಹೆಚ್ಚು ಆಸಕ್ತಿ ಇದೆ ಎಂದು ಸತೀಶ್ ಜಾರಕಿಹೊಳಿ ಮನದ ಇಂಗಿತ ತಿಳಿಸಿದರು.
ಬಳ್ಳಾರಿ ವಿಭಜನೆ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್
ಅನಿಲ್ ಲಾಡ್ ಸ್ಪರ್ಧಿಸುತ್ತೇನೆ ಎಂದು ಆಸಕ್ತಿ ತೋರಿಸಬೇಕಲ್ವ, ಅನಿಲ್ ಲಾಡ್ ಏನು ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಟಿಕೆಟ್ ಕೇಳಿಲ್ಲ. ವೈಯಕ್ತಿಕವಾಗಿ ನಾನು ಸ್ಪರ್ಧಿಸುತ್ತೇನೆ ಎಂದು ಯಾರೂ ಮುಂದೆ ಬಂದಿಲ್ಲ ಎಂದರು.
ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಎಲ್ಲರೂ ಹೇಳಿದ್ದಾರೆ, ಪ್ರಕಾಶ್ ಹುಕ್ಕೇರಿ ಬೆಳಗಾವಿ ಲೋಕಸಭಾ ಟಿಕೆಟ್ ಕೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಬೆಳಗಾವಿ ಲೋಕಸಭಾ ಉಪ ಚುನಾವಣೆಗಾಗಿ ಅಭ್ಯರ್ಥಿ ಆಯ್ಕೆ ಸಂಬಂಧ ಮತ್ತೆ ಸಭೆ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಅಂತಿಮವಾಗಿ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೆಪಿಸಿಸಿಗೆ ಶಿಫಾರಸು ಮಾಡಲಾಗುವುದು, ಡಿಸೆಂಬರ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲೇನೂ ಅಭ್ಯರ್ಥಿಗಳ ಕೊರತೆ ಇಲ್ಲ. ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಚುನಾವಣೆ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತದೆ. ಯಾವಾಗ ಬೇಕಾದರೂ ಉಪ ಚುನಾವಣೆ ದಿನಾಂಕ ಘೋಷಣೆ ಆಗಬಹುದು ಎಂದರು.
ಮಸ್ಕಿ ವಿಧಾನಸಭೆ ಉಪ ಚುನಾವಣೆಗೆ ಬಸನಗೌಡ ತುರವಿಹಾಳ ಸಮರ್ಥ ಅಭ್ಯರ್ಥಿಯಗಿದ್ದು, ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಅವರಿಗೆ ಕೊಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬಂದಿದ್ದಾರೆ ಎಂದು ತಿಳಿಸಿದರು.
ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತರು ಬಹುಸಂಖ್ಯಾತರಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯದ್ದಾರೆ. ಉಪ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.