ಹಠಬಿಟ್ಟ ಹುಕ್ಕೇರಿ, ಚುನಾವಣೆಗೆ ಸ್ಪರ್ಧಿಸಲು ರೆಡಿ!
ಬೆಳಗಾವಿ, ಮಾ. 17 : ಟಿಕೆಟ್ ಸಿಕ್ಕರೂ ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹಠ ಹಿಡಿದಿದ್ದ ಸಚಿವ ಪ್ರಕಾಶ್ ಹುಕ್ಕೇರಿ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದಾರೆ. ಕಾಂಗ್ರೆಸ್ ಮುಖಂಡರು ನಡೆಸಿದ ಸಂಧಾನ ಫಲ ನೀಡಿದ್ದು, ಚುನಾವಣೆಗೆ ಸ್ಪರ್ಧಿಸಲು ಹುಕ್ಕೇರಿ ಒಪ್ಪಿಗೆ ಸೂಚಿಸಿದ್ದಾರೆ.
ಭಾನುವಾರ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ ಬಳಿ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು, ಸಭೆಯಲ್ಲಿ ಪ್ರಕಾಶ್ ಹುಕ್ಕೇರಿ, ಶಾಸಕರು, ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. [ಟಿಕೆಟ್ ಸಿಕ್ಕರೂ ಹಠ ಬಿಡದ ಹುಕ್ಕೇರಿ]

ಪಕ್ಷದ ಹೈಕಮಾಂಡ್ ಚುನಾವಣೆಗೆ ಸ್ಪರ್ಧಿಸಲು ನಿಮಗೆ ಟಿಕೆಟ್ ನೀಡಿದೆ. ಆದ್ದರಿಂದ ನೀವು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಪಕ್ಷದ ಮುಖಂಡರು ಮುಜರಾಯಿ ಮತ್ತು ಸಕ್ಕರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಅವರ ಮನವೊಲಿಸಿದ್ದಾರೆ. ಪಕ್ಷದ ನಾಯಕರ ಒತ್ತಾಯಕ್ಕೆ ಮಣಿದ ಹುಕ್ಕೇರಿ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ. [ಕಾಂಗ್ರೆಸ್ 2ನೇ ಪಟ್ಟಿ]
ಈ ಕುರಿತು ಹೇಳಿಕೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕೋಡಿ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಅವರು ಒಪ್ಪಿಗೆ ಸೂಚಿಸಿದ್ದು, ಸೋಮವಾರದಿಂದಲೇ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ ಎಂದರು.
ಹಠ ಹಿಡಿದಿದ್ದ ಹುಕ್ಕೇರಿ : ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯಲ್ಲಿ ಸಚಿವ ಪ್ರಕಾಶ್ ಹುಕ್ಕೇರಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರೂ, ತನಗೆ ಟಿಕೆಟ್ ಬೇಡವೇ ಬೇಡ ಎಂದು ಪ್ರಕಾಶ್ ಹುಕ್ಕೇರಿ ಹಠ ಹಿಡಿದಿದ್ದರು. ಆದ್ದರಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗುತ್ತಾರೆಂಬ ಕುತೂಹಲ ಮೂಡಿತ್ತು.












Click it and Unblock the Notifications