ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಹುಕ್ಕೇರಿ!
ಬೆಳಗಾವಿ, ಸೆಪ್ಟೆಂಬರ್ 11 : ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಕ್ಕರೆ ಖಾತೆ ಸಚಿವರಾಗಿದ್ದ ಪ್ರಕಾಶ್ ಹುಕ್ಕೇರಿ ಅವರು, ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಸಂಸತ್ ಪ್ರವೇಶಿಸಿದ್ದರು.
ಅಥಣಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ ಅವರು, 'ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಯಾವುದಾದರೂ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಹೇಳಿದ್ದಾರೆ. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.

ಕಾಗವಾಡ ಕ್ಷೇತ್ರದ ಅಭಿವೃದ್ಧಿಗೆ ಪ್ರಕಾಶ್ ಹುಕ್ಕೇರಿ ಅವರು ಹೆಚ್ಚು ಗಮನಹರಿಸಿದ್ದಾರೆ. ಆದ್ದರಿಂದ, ಅಲ್ಲಿಂದಲೇ 2018ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಪ್ರಕಾಶ್ ಹುಕ್ಕೇರಿ ಅವರು ಇನ್ನೂ ಖಚಿತಪಡಿಸಿಲ್ಲ.
2013ರ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಪ್ರಕಾಶ್ ಹುಕ್ಕೇರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವರಾಗಿದ್ದರು.
2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಅವರಿಗೆ ಟಿಕೆಟ್ ನೀಡಿತ್ತು. ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹಠ ಹಿಡಿದಿ ಕುಳಿತಿದ್ದರು.
ಕಾಂಗ್ರೆಸ್ ನಾಯಕರ ಮನವೊಲಿಕೆ ಬಳಿಕ ಚುನಾವಣೆಗೆ ಸ್ಪರ್ಧಿಸಿದ್ದರು. 4,74,373 ಮತಗಳನ್ನು ಪಡೆದು, ಬಿಜೆಪಿಯ ರಮೇಶ್ ಕತ್ತಿ ಅವರನ್ನು ಸೋಲಿಸಿ ಲೋಕಸಭೆ ಪ್ರವೇಶಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.












Click it and Unblock the Notifications