ಬೆಳಗಾವಿ ಉಪ ಚುನಾವಣೆ; ಬಿಜೆಪಿಗೆ ಟಿಕೆಟ್ಗೆ ಮುತಾಲಿಕ್ ಬೇಡಿಕೆ!
ಬೆಳಗಾವಿ, ಜನವರಿ 21: "ಸತತ 45 ವರ್ಷ ಮನೆ ಬಿಟ್ಟು ಹಿಂದುತ್ವ, ಜಾಗೃತಿ, ಸಮಾಜಕ್ಕಾಗಿ ನಾನು ಹಲವು ತ್ಯಾಗಗಳನ್ನು ಮಾಡಿದ್ದೇನೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ನನಗೆ ನೀಡಬೇಕು" ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಗುರುವಾರ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿ ನಡೆಸಿದರು. "ನಾನೂ ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ" ಎಂದು ತಿಳಿಸಿದರು.
"ಮನೆ ಬಿಟ್ಟು ನಾನು ಹಲವಾರು ಸಮಾಜ ಜಾಗೃತಿ ಕಾರ್ಯಕ್ರಮಗಳು, ಸಂಘಟನೆಗಳಲ್ಲಿ ಭಾಗಿಯಾಗಿದ್ದೇನೆ. ಇದನ್ನು ಪರಿಗಣಿಸಿ ಬಿಜೆಪಿ ಪಕ್ಷ ಟಿಕೆಟ್ ನೀಡಬೇಕು. ಈ ಕುರಿತು ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ" ಎಂದರು.

ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು 2020ರ ಸೆಪ್ಟೆಂಬರ್ನಲ್ಲಿ ಮೃತಪಟ್ಟಿದ್ದರು. ಈಗ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
ಭಾನುವಾರ ಬೆಳಗಾವಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳ ಜೊತೆ ಉಪ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ, ಅಭ್ಯರ್ಥಿ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.
ದಿ. ಸುರೇಶ್ ಅಂಗಡಿ ಅವರ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವಿದೆ. ಮತ್ತೊಂದು ಕಡೆ ಉಪ ಚುನಾವಣೆಗೆ ಟಿಕೆಟ್ಗಾಗಿ 70ಕ್ಕೂ ಅಧಿಕ ಜನರು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ದಿ. ಸುರೇಶ್ ಅಂಗಡಿ ಅವರ ಪುತ್ರಿ, ಸಚಿವ ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್ ಅವರು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದು, ಯಾವ ನಾಯಕರು ಖಚಿತಪಡಿಸಿಲ್ಲ.
ಅಮೆರಿಕದಲ್ಲಿರುವ ಬೆಳಗಾವಿಯ ಮೂಡಲಗಿ ತಾಲೂಕಿನ ಸೂರ್ಯಕಾಂತ ಸಂತ್ರಿ ಅವರು ಎನ್ಆರ್ಐ ಕೋಟಾದಲ್ಲಿ ಟಿಕೆಟ್ ನೀಡಬೇಕು ಎಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಉಪ ಚುನಾವಣೆ ದಿನಾಂಕ ಇನ್ನು ಘೋಷಣೆಯಾಗಬೇಕಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಉಪ ಚುನಾವಣೆಗೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನ ಕೈಗೊಂಡಿದೆ.












Click it and Unblock the Notifications