ಮಹಾರಾಷ್ಟ್ರದಲ್ಲಿ ಮಳೆ; ಮುನ್ನೆಚ್ಚರಿಕಾ ಕ್ರಮಕ್ಕೆ ರಮೇಶ್ ಜಾರಕಿಹೊಳಿ ಸೂಚನೆ
ಬೆಳಗಾವಿ, ಅಕ್ಟೋಬರ್ 15: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಾನಿ ಸಂಭವಿಸಿದೆ. ಈ ಕುರಿತು ಚರ್ಚಿಸಲು ನಾಳೆ ಸಭೆ ಕರೆದಿರುವುದಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
"ಬೆಳಗಾವಿ ಜಿಲ್ಲೆಯ ಮಳೆಯ ಹಾನಿಯ ಕುರಿತು ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನಾಳೆ ಸಭೆ ಕರೆದು ಚರ್ಚಿಸುವೆ. ಕಲಬುರಗಿ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ಹಾನಿ ಕುರಿತ ಪರಿಶೀಲನೆಗೆ ಅಧಿಕಾರಿಗಳ ತಂಡ ಕಳಿಸಿದ್ದೇವೆ. ವರದಿ ಬಂದ ಮೇಲೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಹುಕ್ಕೇರಿಗೂ ಈಗಾಗಲೇ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಾಳೆ ಸಭೆ ಕರೆದು ವಾಸ್ತವ ಸ್ಥಿತಿ ಬಗ್ಗೆ ಮಾಹಿತಿ ಪಡೆಯುವೆ" ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಆದ ಮಳೆಯಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು. ಪ್ರವಾಹ ಪರಿಸ್ಥಿತಿ ಎದುರಿಸಲು ಬೋಟ್ಗಳ ವ್ಯವಸ್ಥೆ ಸೇರಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವ ಬಗ್ಗೆ ಡಿಸಿ ಜತೆ ಚರ್ಚೆ ನಡೆಸಲಾಗಿದೆ. ಆಲಮಟ್ಟಿಯಿಂದ ನೀರು ಬಿಡುಗಡೆಗೆ ವ್ಯವಸ್ಥೆ ಮಾಡಲಾಗಿದೆ. ನಾರಾಯಣಪುರ ಜಲಾಶಯದಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಆಲಮಟ್ಟಿ ಭಾಗದಲ್ಲಿ ಮಳೆಯ ಪ್ರಮಾಣ ತಗ್ಗಿದ ಬಗ್ಗೆ ವರದಿ ಇದೆ ಎಂದರು.

ಮಹಾರಾಷ್ಟ್ರದ ಸಿಂಧನೂರು, ರತ್ನಾಗಿರಿ ಭಾಗದಲ್ಲಿ ಮಳೆ ಜಾಸ್ತಿ ಇದೆ. ಹೀಗಾಗಿ ಚಿಕ್ಕೋಡಿ ಭಾಗದಲ್ಲಿ ಕೃಷ್ಣಾ ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ಪ್ರತಿ ಗಂಟೆಗೊಮ್ಮೆ ಮಹಾರಾಷ್ಟ್ರದ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆಯ ಪ್ರಮಾಣ ಜಾಸ್ತಿ ಆದರೆ ಎಚ್ಚರಿಕೆಯಿಂದ ಇರಲು ಸೂಚನೆ ಕೊಟ್ಟಿದ್ದೇವೆ. ತಹಶೀಲ್ದಾರ್, ಪೊಲೀಸರ ಮೂಲಕ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.












Click it and Unblock the Notifications