ಯಾರಪ್ಪಂದ ಏನೈತಿ ಬೆಳಗಾವಿ ಜೊತೆ ಮುಂಬೈ ಸಹ ನಮ್ದೈತಿ
ಬೆಳಗಾವಿ, ಜನವರಿ 28: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರಚೋದನಕಾರಿ ಹೇಳಿಕೆ ನೀಡಿದ್ದ ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ವಿವಾದ ಪುಸ್ತಕವನ್ನು ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿತ್ತು. ಇದಕ್ಕೆ ಮಹಾ ಸಿಎಂ ಉದ್ಧವ್ ಠಾಕ್ರೆ ಅವರ ಶವಯಾತ್ರೆ ಮಾಡಿ ಪ್ರತಿಭಟನೆ ನಡೆಸಲಾಯಿತು.
"ಜನರಿಗೆ ಪ್ರಚೋದನೆ ಮಾಡಿ ಅಧಿಕಾರಕ್ಕೆ ಬರೋದು ಶಿವಸೇನೆ ಅಜೆಂಡಾ''
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕರುನಾಡ ಯುವಸೇನೆ ಕಾರ್ಯಕರ್ತರು ಯಾರಪ್ಪಂದ ಏನೈತಿ, ಬೆಳಗಾವಿ ಜೊತೆ ಮುಂಬೈ ಸಹ ನಮ್ದೈತಿ ಎನ್ನುವ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು.
ಉದ್ಧವ್ ಠಾಕ್ರೆ ಅವರ ಹೇಳಿಕೆಗೆ ಮುಂಬೈ ನಮ್ದು ತಿರುಗೇಟು ನೀಡಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಕಾರ್ಯಕರ್ತರು ಜೈಕಾರ ಕೂಗಿದರು. ಅದೇ ರೀರಿ ಮಹಾರಾಷ್ಟ್ರ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಇಎಸ್ ಪುಂಡರ ವಿರುದ್ಧವೂ ಆಕ್ರೋಶ ವ್ಯಕ್ತವಾಯಿತು.
ಬುಧವಾರ ಸರ್ಕಾರಿ ಕಾರ್ಯಕ್ರಮದಲ್ಲಿ ಉದ್ಧಟತನದ ಹೇಳಿಕೆ ನೀಡಿದ್ದ ಉದ್ಧವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡಪರ ಕಾರ್ಯಕರ್ತರು ಧಿಕ್ಕಾರ ಕೂಗಿದರು.
ಮಹಾರಾಷ್ಟ್ರ ಸರ್ಕಾರವು ಬುಧವಾರ ಕರ್ನಾಟಕ ಮಹಾರಾಷ್ಟ್ರ ಸೀಮಾವಿವಾದ ಪುಸ್ತಕ ಬಿಡುಗಡೆ ಮಾಡಿದೆ. ಮಹಾರಾಷ್ಟ್ರ ಸರ್ಕಾರದ ಕ್ರಮ ಖಂಡಿಸಿ ಕುಂದಾನಗರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ.