ರಾಹುಲ್ ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ : ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 23 : 'ಲೋಕಸಭಾ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಸಿದ್ಧವಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಿದ್ದರಾಮಯ್ಯ ಅವರು, 'ಕರ್ನಾಟದಿಂದ ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡುವುದಿಲ್ಲ. ಅಮೇಥಿ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಂಪುಟ ವಿಸ್ತರಣೆ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಸಂಪುಟ ವಿಸ್ತರಣೆ ಬಳಿಕ ಕೆಲವರಿಗೆ ಅಸಮಾಧಾನ ಆಗಿರುವುದು ನಿಜ. ಎಲ್ಲರನ್ನೂ ಸಮಾಧಾನ ಮಾಡುವುದಕ್ಕೆ ಆಗುವುದಿಲ್ಲ. ಸದ್ಯ ಆರು ಜನರನ್ನು ಸಚಿವರನ್ನಾಗಿ ಮಾಡಿದ್ದೇವೆ. ಲೋಕಸಭೆ ಚುನಾವಣೆ ಬಳಿಕ ಮತ್ತೆ ವಿಸ್ತರಣೆ ಆಗಲಿದೆ' ಎಂದರು.

'ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲ ಯಾವ ಶಾಸಕರು ರಾಜೀನಾಮೆ ಕೊಡುವುದಿಲ್ಲ. ನಮ್ಮ ಪಕ್ಷದಲ್ಲಿ ಅತೃಪ್ತಿ ಯಾರಲ್ಲೂ ಇಲ್ಲ, ನಾನು ನೋಡಿಲ್ಲ. ನನಗೆ ತಿಳಿದಿರುವ ಹಾಗೆ ಅವರು ಕಾಂಗ್ರೆಸ್ನವರು' ಎಂದರು.
'ಬಿಜೆಪಿ ಕೋಮುವಾದಿ ಪಕ್ಷ, ಮುಳುಗುತ್ತಿರುವ ಹಡಗು. ಮುಳುಗುತ್ತಿರುವ ಹಡಗಿನಲ್ಲಿ ಯಾರಾದರೂ ಹೋಗುತ್ತಾರೆಯೇ?. ಯಾರೂ ಸಹ ಬಿಜೆಪಿಗೆ ಹೋಗುವುದಿಲ್ಲ' ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications