ರಾಯಬಾಗ ಶಾಸಕ ದುರ್ಯೋಧನ ಐಹೊಳೆಗೆ ಕೋವಿಡ್ ದೃಢ
ರಾಯಬಾಗ, ಸೆಪ್ಟೆಂಬರ್ 21: ರಾಯಬಾಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ವಿಧಾನ ಮಂಡಲದ ಕಲಾಪ ಸೋಮವಾರ ಆರಂಭವಾಗುವ ಹಿನ್ನೆಲೆಯಲ್ಲಿ ಎಲ್ಲ ಶಾಸಕರನ್ನು ಕಡ್ಡಾಯವಾಗಿ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರು ಕೋವಿಡ್ ಸೋಂಕಿಗೆ ಒಳಗಾಗಿರುವುದು ಖಚಿತವಾಗಿದೆ.
ತಮಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಆದರೆ ಯಾವುದೇ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲಿಯೇ ಕ್ವಾರೆಂಟೈನ್ ಆಗಿರುವುದಾಗಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.
''ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ'' ಎಂದು ಅವರು ತಿಳಿಸಿದ್ದಾರೆ.

''ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಡಕಾಗದಂತೆ ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ನನ್ನ ಕಾರ್ಯಚಟುವಟಿಕೆಗಳನ್ನು ಮುಂದುವರೆಸಲಿದ್ದು, ಆದಷ್ಟು ಬೇಗ ಗುಣಮುಖರಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ'' ಎಂದಿದ್ದಾರೆ.
''ನನ್ನನ್ನು ನೇರವಾಗಿ ಮುಖಾಮುಖಿಯಾಗದೇ ದೂರವಾಣಿ ಮುಖಾಂತರ ಸಂಪರ್ಕಿಸಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ'' ಎಂದು ಅವರು ಕ್ಷೇತ್ರದ ಜನತೆ ಹಾಗೂ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ರಾಯಭಾಗ ಕ್ಷೇತ್ರದ ಶಾಸಕರು ಹಾಗೂ ಆತ್ಮೀಯರಾದ ದುರ್ಯೋಧನ ಐಹೊಳೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಶೀಘ್ರ ಸೋಂಕಿನಿಂದ ಗುಣಮುಖರಾಗಿ, ಎಂದಿನಂತೆ ಜನ ಸೇವೆಯಲ್ಲಿ ನಿರತರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹಾರೈಸಿದ್ದಾರೆ.












Click it and Unblock the Notifications