ಬೆಳಗಾವಿ ಟಿಕೆಟ್ಗೆ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಜಟಾಪಟಿ
Recommended Video

ಬೆಳಗಾವಿ, ಮಾರ್ಚ್ 17 : ಬೆಳಗಾವಿ ರಾಜಕೀಯದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೊಮ್ಮೆ ಹಗ್ಗಜಗ್ಗಾಟ ಆರಂಭವಾಗಿದೆ. ಲೋಕಸಭಾ ಚುನಾವಣೆ ಟಿಕೆಟ್ ವಿಚಾರದಲ್ಲಿ ಇಬ್ಬರು ನಾಯಕರು ದೆಹಲಿಗೆ ತೆರಳಿದ್ದಾರೆ.
ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಶಿವಕಾಂತ ಸಿದ್ನಾಳ, ಡಾ.ವಿ.ಎಸ್.ಸಾಧುನವರ, ಅಂಜಲಿ ನಿಂಬಾಳ್ಕರ್, ಚನ್ನರಾಜ ಹಟ್ಟಿಹೊಳೆ, ವಿವೇಕರಾವ್ ಪಾಟೀಲ್ ಅವರ ಹೆಸರು ಕೇಳಿಬರುತ್ತಿದೆ. ಯಾರು ಅಭ್ಯರ್ಥಿ ಎಂಬುದು ಖಚಿತವಾಗಿಲ್ಲ.
ಆದರೆ, ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ದೆಹಲಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಹೋದರ ಚನ್ನರಾಜ ಹಟ್ಟಿಹೊಳೆ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿ ಅವರು ವಿವೇಕರಾವ್ ಪಾಟೀಲ್ ಅವರಿಗೆ ಟಿಕೆಟ್ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ...

ಬೆಳಗಾವಿ ಕಾಂಗ್ರೆಸ್ ಟಿಕೆಟ್
ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್, ಚನ್ನರಾಜ ಹಟ್ಟಿಹೊಳೆ ನಡುವೆ ಬೆಳಗಾವಿ ಕಾಂಗ್ರೆಸ್ ಟಿಕೆಟ್ಗಾಗಿ ಪೈಪೋಟಿ ನಡೆದಿದೆ. ಕಳೆದ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಈ ಬಾರಿ ಚನ್ನರಾಜ ಹಟ್ಟಿಹೊಳೆ ಅವರಿಗೆ ಟಿಕೆಟ್ ಕೊಡಿಸಲು ಅವರು ಪ್ರಯತ್ನ ನಡೆಸಿದ್ದಾರೆ.

ಟಿಕೆಟ್ ಬೇಡ ಎಂಬ ಸಂದೇಶ
ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರು ಮಹೇಶ್ ಕುಮಟಳ್ಳಿ ಹಾಗೂ ನಾಗೇಶ್ ಅವರ ಜೊತೆ ದೆಹಲಿಗೆ ತೆರಳಿದ್ದಾರೆ. ವಿವೇಕರಾವ್ ಪಾಟೀಲ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿಗೆ ಬೆಂಬಲ ನೀಡಲಿದ್ದಾರೆಯೇ?
ಕಾಂಗ್ರೆಸ್ ನಾಯಕರ ಜೊತೆ ಅಸಮಾಧಾನಗೊಂಡಿದ್ದ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಟಿಕೆಟ್ಗೆ ಬೇಡಿಕೆ ಇಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ. ತಾವು ಹೇಳಿದ ನಾಯಕರಿಗೆ ಟಿಕೆಟ್ ನೀಡದಿದ್ದರೆ ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆ ಇದೆ.

ಕಾಂಗ್ರೆಸ್ ಬಿಡುವುದಿಲ್ಲ
ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಬಿಡಲಿದ್ದಾರೆ ಎಂಬ ಸುದ್ದಿಯನ್ನು ಅವರ ಆಪ್ತರು ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಲಹೆಯಂತೆ ಅವರು ಪಕ್ಷದಲ್ಲಿಯೇ ಮುಂದುವರೆಯಲಿದ್ದಾರೆ. ರಮೇಶ್ ಜಾರಕಿಹೊಳಿ ಬಿಜೆಪಿ ಸೇರುವ ಕುರಿತು ಚರ್ಚಿಸಲು ದೆಹಲಿಗೆ ತರಳಿದ್ದಾರೆ ಎಂಬ ಸುದ್ದಿಯನ್ನು ಆಪ್ತರು ತಳ್ಳಿ ಹಾಕಿದ್ದಾರೆ.












Click it and Unblock the Notifications