ಕೊರೊನಾ ತಡೆಗೆ ಅಧಿಕಾರಿಗಳಿಗೆ ರಮೇಶ್ ಜಾರಕಿಹೊಳಿ ಸೂಚನೆ
ಗೋಕಾಕ್: ಕೊರೋನಾ ಸೋಂಕು ನಿರ್ಮೂಲನೆಗಾಗಿ ರಾಜ್ಯ ಸರ್ಕಾರವು ಪ್ರಕಟಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಚಿವರ ಗೃಹಕಚೇರಿಯಲ್ಲಿ ಇಂದು ನಡೆದ ಗೋಕಾಕ್ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳು ಸದಾ ಜನಪ್ರತಿನಿಧಿಗಳ ಜೊತೆ ಸಂಪರ್ಕದಲ್ಲಿ ಇರಬೇಕು. ಮನೆಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಬೇಕು. ಕೋವಿಡ್ 19 ಕುರಿತು ಜನರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಣ್ಣೆ ಏಟಲ್ಲಿ ಶಾಸಕ ಎ.ಮಂಜುಗೆ ಕುಡುಕರ ಅವಾಜ್
ಆರೋಗ್ಯ ಕಾರ್ಯಕರ್ತರಿಗೆ ರಕ್ಷಣೆ ಒದಗಿಸಬೇಕು. ಮದ್ಯದ ಅಂಗಡಿಗಳಲ್ಲಿ ವ್ಯಕ್ತಿಗತ ಸಾಮಾಜಿಕ ಅಂತರ ಪಾಲಿಸದಿದ್ದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ರಮೇಶ್ ಜಾರಕಿಹೊಳಿ ಸೂಚಿಸಿದರು.
ವ್ಯಾಪಾರ ವಹಿವಾಟಿಗೆ ವಿನಾಯಿತಿ ನೀಡಲಾಗಿದ್ದರೂ, ಜನರು ಮಾಸ್ಕ್ ಧರಿಸಿಯೇ ಮನೆಯಿಂದ ಹೊರಗೆ ಬರಬೇಕು. ಸ್ಯಾನಿಟೈಸರ್ ಬಳಕೆಯ ಅಗತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವವರನ್ನು ನಿರ್ದಾಕ್ಷಿಣ್ಯವಾಗಿ ದಂಡಿಸಬೇಕೆಂದು ಸಚಿವ ಜಾರಕಿಹೊಳಿ ತಿಳಿಸಿದರು.
ವೈದ್ಯಕೀಯ ಸಿಬ್ಬಂದಿಗಳೂ ಸೇರಿದಂತೆ ಈ ಕೊರೋನಾ ಸೋಂಕು ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಕೋವಿಡ್ ಯೋಧರನ್ನು ಗೌರವಿಸಬೇಕು. ಸವಾಲಿನ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜನ ಒಗ್ಗಟ್ಟಾಗಿ, ಮನೆಯಲ್ಲಿಯೇ ಇರುವಂತೆ ಅರಿವು ಮೂಡಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರು ಇರುವ ಹಿನ್ನೆಲೆಯಲ್ಲಿ ಗೋಕಾಕ್ ಜನ ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ರಮೇಶ್ ಜಾರಕಿಹೊಳಿ ಕರೆ ನೀಡಿದರು.
ಅಧಿಕಾರಿಗಳ ಸಭೆಯಲ್ಲಿ ಗೋಕಾಕ್ನ ತಹಶಿಲ್ದಾರ್, ಪೌರಾಯುಕ್ತ, ಡಿವೈಎಸ್ಪಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.