ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೇ ಬಿಜೆಪಿ ಅಭ್ಯರ್ಥಿಯಾಗಿ ನಾನೂ ಸ್ಪರ್ಧಿಸುವುದಿಲ್ಲ: ರಮೇಶ್ ಜಾರಕಿಹೊಳಿ
ವಿಜಯಪುರ, ಮಾರ್ಚ್ 10: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೇ ನಾನೂ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ, ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಪಕ್ಷ ಟಿಕೆಟ್ ನೀಡದಿದ್ದರೆ ಗೋಕಾಕದಿಂದ ಬಿಜೆಪಿ ಅಭ್ಯರ್ಥಿಯಾಗಿ ತಾವು ಚುನಾವಣೆ ಎದುರಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಲೇ ಬೇಕು ಎಂಬ ಒತ್ತಡವನ್ನು ಆಡಳಿತರೂಢ ಬಿಜೆಪಿ ಮೇಲೆ ಹಾಕುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಎಲ್ಲಾ ಹಾಲಿ ಶಾಸಕರಿಗೆ ಈ ಬಾರಿ ಪಕ್ಷದಿಂದ ಟಿಕೆಟ್ ಸಿಗದಿರಬಹುದು ಮಾಡದಿರಬಹುದು ಎಂದು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಮತ್ತು ಹಾಲಿ ಸಿಎಂಗಳ ಮಾತು ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಅವರ ಕೆಲವು ಬೆಂಬಲಿಗರಿಗೆ ಟಿಕೆಟ್ ಸಿಗದಿರಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.
"ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಬೇಕು ಎಂದು ಸಚಿವ ಸ್ಥಾನ ತ್ಯಾಗ ಮಾಡಿ ನಾವೆಲ್ಲರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇವೆ. ನಾವು ಬಿಜೆಪಿಗೆ ಸೇರಿದ್ದು ಅದರ ತತ್ವಗಳನ್ನು ನಂಬಿ ನಾವು ಅಧಿಕಾರ ಅಥವಾ ಹಣದ ಆಸೆಯಿಂದಲ್ಲ. ಹೀಗಾಗಿ ನಮ್ಮೆಲ್ಲರಿಗೂ ಪಕ್ಷ ಟಿಕೆಟ್ ನೀಡಬೇಕಿರುವುದು ಸಹಜ" ಎಂದಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ತಾವು ಮುಖ್ಯ ಕಾರನ ಎಂಬುದನ್ನು ಮತ್ತೆ ನೆನಪಿಸಿದ್ದಾರೆ.
ಇನ್ನು, ಕೆಲವು ಸಚಿವರು ಸೇರಿದಂತೆ ಬಿಜೆಪಿಯ ಕೆಲವು ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಸಚಿವ ಗೋಪಾಲಗೌಡ ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲ, ಕಾಂಗ್ರೆಸ್ ಈಗಾಗಲೇ ಮುಳುಗುತ್ತಿರುವ ಹಡಗು. ಯಾರಾದರೂ ಆ ಪಕ್ಷಕ್ಕೆ ಏಕೆ ಸೇರುತ್ತಾರೆ..? ಎಂದು ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

"ನಾನು ಅಂತಹ ವರದಿಗಳನ್ನು ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ಈ ಬಗ್ಗೆ ಪಕ್ಷದಲ್ಲಿ ಯಾರೂ ನನಗೆ ಹೇಳಿಲ್ಲ. ಅದೇನೇ ಇರಲಿ, ಗೋಪಾಲಗೌಡರು ನನ್ನ ಒಳ್ಳೆ ಗೆಳೆಯರಾಗಿರುವುದರಿಂದ ಅವರೊಡನೆ ಮಾತನಾಡುತ್ತೇನೆ. ಕಾಂಗ್ರೆಸ್ ಸೇರುವುದು ವ್ಯರ್ಥ ಎಂದು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಅದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ" ಎಂದು ರಮೇಶದ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಚಿವ ಸಂಪುಟಕ್ಕೆ ಮರು ಸೇರ್ಪಡೆಯಾಗದಿರುವ ಬಗ್ಗೆ ಬೇಸರವಿಲ್ಲ ಎಂದಿರುವ ಅವರು, "ನನ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟಿಲ್ಲ. ನನ್ನ ಸ್ವಂತ ಇಚ್ಛೆಯಿಂದ ನಾನು ಅದನ್ನು ತ್ಯಜಿಸಿದ್ದೇನೆ. ಮತದಾರರ ಮೇಲೆ ನನ್ನ ಪ್ರಭಾವವಿರುವ ಬೆಳಗಾವಿ ಮತ್ತು ಇತರ ಜಿಲ್ಲೆಗಳಲ್ಲಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.












Click it and Unblock the Notifications