ಗೋಕಾಕ್; ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ
ಬೆಳಗಾವಿ, ಮಾರ್ಚ್ 06: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಆರೋಪಿಸಿ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಷಡ್ಯಂತ್ರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರು ಶನಿವಾರ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಿ ಗ್ರಾಮದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಚಿವರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ವಿರುದ್ಧ ರಾಜಕೀಯ ಪಿತೂರಿ ಮಾಡಲಾಗಿದೆ. ಅವರು ಎರಡು ದಶಕಗಳಿಂದ ರಾಜಕಾರಣ ಮಾಡುತ್ತಿದ್ದಾರೆ. ಅವರ ವಿರುದ್ಧ ಈ ರೀತಿಯ ಆರೋಪ ಒಮ್ಮೆಯೂ ಕೇಳಿ ಬಂದಿಲ್ಲ ಎಂದು ಬೆಂಬಲಿಗರು ಹೇಳಿದರು.

ಬಿಜೆಪಿಯಲ್ಲಿ ರಮೇಶ್ ಜಾರಕಿಹೊಳಿ ಉತ್ತುಂಗಕ್ಕೆ ಏರುತ್ತಿದ್ದಾರೆ. ಇದನ್ನು ಸಹಿಸದೇ ಅವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಪಿತೂರಿ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದುದ ಆಗ್ರಹಿಸಲಾಯಿತು.
ಬಿಡುಗಡೆಗೊಂಡಿರುವ ಸಿಡಿ ನಕಲಿಯಾಗಿದೆ. ವಿಡಿಯೋ ಬಹಿರಂಗಪಡಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಮೇಶ್ ಜಾರಕಿಹೊಳಿ ಅಭಿಮಾನಿಗಳು ಟೈಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ದಿನೇಶ್ ಕಲ್ಲಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಅವರು ದೋಷ ಮುಕ್ತರಾಗಲಿದ್ದಾರೆ. ರಮೇಶ್ ಜಾರಕಿಹೊಳಿ ಮರಳಿ ಸಚಿವರಾಗುತ್ತಾರೆ ಎಂದು ಅಭಿಮಾನಿಗಳು ವಿಶ್ವಾಸವನ್ನು ವ್ಯಕ್ತಪಡಿಸಿದರು.












Click it and Unblock the Notifications