ಸವದತ್ತಿ ಯಲ್ಲಮ್ಮನ ದೇಗುಲಕ್ಕೆ ಭಕ್ತರಿಗಿದ್ದ ನಿರ್ಬಂಧ ಮತ್ತೆ ಮುಂದುವರಿಕೆ
ಬೆಳಗಾವಿ, ಅಕ್ಟೋಬರ್ 31: ಕೊರೊನಾ ಸೋಂಕು ಹರಡುವಿಕೆಯ ನಿಯಂತ್ರಣಕ್ಕಾಗಿ ಅ.31ರವರೆಗೆ ಸವದತ್ತಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಹೇರಿದ್ದ ನಿರ್ಬಂಧವನ್ನು ಮತ್ತೆ ಒಂದು ತಿಂಗಳು ಮುಂದುವರೆಸಲಾಗಿದೆ.
ನವರಾತ್ರಿ ಸಂದರ್ಭದಲ್ಲೂ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಅಕ್ಟೋಬರ್ 31ರವರೆಗೂ ದೇವಸ್ಥಾನಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದರು. ಇದೀಗ ನಿರ್ಬಂಧವನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸತತ 8 ತಿಂಗಳಿಂದ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಮಾರ್ಚ್ 22ರಿಂದಲೂ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನದೊಂದಿಗೆ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕ ದೇವಸ್ಥಾನಕ್ಕೂ ನಿರ್ಬಂಧ ವಿಧಿಸಲಾಗಿದೆ. ನವೆಂಬರ್ 30ರವರೆಗೂ ಎರಡೂ ಶಕ್ತಿಪೀಠಗಳಿಗೆ ಭಕ್ತರನ್ನು ನಿರ್ಬಂಧಿಸಲಾಗಿದೆ.

ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ಹೇರುವುದು ಅನಿವಾರ್ಯವೂ ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ ಎಂದು ಸವದತ್ತಿ ಯಲ್ಲಮ್ಮ ದೇವಸ್ಥಾನ ಸಿಇಒ ರವಿ ಕೋಟಾರಗಸ್ತಿ ಮಾಹಿತಿ ನೀಡಿದ್ದಾರೆ.












Click it and Unblock the Notifications