ಮುಂದುವರೆದ ರಣಮಳೆ: ಬೆಳಗಾವಿ-ಖಾನಾಪೂರ ನಡುವೆ ಭಾರಿ ವಾಹನಗಳಿಗೆ ನಿಷೇಧ
ಬೆಳಗಾವಿ, ಜುಲೈ, 23: ಬಿಡುವು ನೀಡದೇ ಮಳೆ ಸುರಿಯುತ್ತಿರುವ ಹಿನ್ನೆಲೆ ರಸ್ತೆ ಹಾಗೂ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ, ಬೆಳಗಾವಿ-ಖಾನಾಪೂರ ನಡುವೆ ಭಾರಿ ವಾಹನಗಳಿಗೆ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ನಗರಕ್ಕೆ ಹೊಂದಿಕೊಂಡ-ಪೀರಣವಾಡಿಯಿಂದ ಭಾರಿ ವಾಹನ ನಿಷೇಧ ಹಾಗೂ ಜಾಂಬೋಟಿ-ಖಾನಾಪುರ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಸಮಯ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಖಾನಾಪುದಿಂದ ಜಾಂಬೋಟಿಗೆ ಭಾರಿ ವಾಹನಗಳು ಏಕಮುಖವಾಗಿ ಸಂಚರಿಸಲು ಬೆಳಗ್ಗೆ 6ರಿಂದ ಮಧ್ಯಾಹ್ನ 1ಕ್ಕೆ ಹಾಗೂ ಜಾಂಬೋಟಿಯಿಂದ ಖಾನಾಪುರ ಏಕಮುಖ ಸಂಚರಿಸಲು ಮಧ್ಯಾಹ್ನ 1ರಿಂದ ರಾತ್ರಿ 8ರವರೆಗೆ ಸಮಯ ನಿಗದಿ ಮಾಡಲಾಗಿದೆ.

ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ನೈವೇದ್ಯ ಬಿಡಲು ಹೋಗಿದ್ದ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಬಳಿ ಸೋಮವಾರ ನಡೆದಿದೆ. ಮೃತ ಯುವಕನನ್ನು ಸ್ಥಳೀಯ ರೋಹಣ ಪಾಟೀಲ (31) ಎಂದು ಗುರುತಿಸಲಾಗಿದೆ. ಸ್ನೇಹಿತನೋರ್ವನ ಜೊತೆಗೆ ನದಿ ಬಳಿ ಹೋದಾಗ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಕೊನೆಯುಸಿರೆಳೆದಿದ್ದಾನೆ. ಸೋಮವಾರ ಇಳಿಸಂಜೆ ಶವ ಹೊರತೆಗೆದಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿ: ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ಮಾರ್ಕಂಡೇಯ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಮಾರ್ಕೆಂಡೆಯ ನದಿ ನೀರಿನ ಹರಿವು ಹೆಚ್ಚಳ ಹಿನ್ನೆಲೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಅಂಬೇವಾಡಿಯ ರೈತ ಕುಟುಂಬಗಳು ವಾಸವಾಗಿದ್ದ ಮನೆಗಳನ್ನು ನದಿ ನೀರು ಸುತ್ತುವರೆದಿದ್ದು, ಇಲ್ಲಿನ ಜನರು ಜೀವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ಮಳೆಗಾಲ ಸಮಯದಲ್ಲೂ ಈ ಭಾಗದ ರೈತ ಕುಟುಂಬಗಳಿಗೆ ಒಂದಲ್ಲ ಒಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಇನ್ನು ಇದೀಗ ನದಿ ನೀರು ಮನೆಯೊಳಗೆ ನುಗ್ಗುವ ಭೀತಿ ಎದುರಾದ ಹಿನ್ನೆಲೆ ರೈತರು ತಮ್ಮ ಚಿಕ್ಕ ಚಿಕ್ಕ ಮಕ್ಕಳನ್ನು ಮೆನೆಯಿಂದ ಬೇರೆಡೆಗೆ ಸ್ಥಳಾಂತರಿಸುವ ಕೆಲಸವನ್ನು ಮಾಡುತ್ತಿದ್ದಾರೆ.
ಈಗಾಗಲೇ ಈ ಭಾಗದ ಸಾವಿರಾರು ಹೆಕ್ಟೇರ್ ಜಮೀನು ಕೂಡ ಮಾರ್ಕಂಡೇಯ ನದಿ ನೀರಿನಲ್ಲಿ ಮುಳುಗಡೆಯಾಗಿದ್ದು, ಪರಿಣಾಮ ಭತ್ತ, ಕಬ್ಬು, ಮೆಣಸಿನಕಾಯಿ, ಮೆಕ್ಕೆಜೋಳ, ತರಕಾರಿ ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಇನ್ನು ಬೆಳೆಗಳನ್ನು ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.












Click it and Unblock the Notifications