ಬೆಳಗಾವಿಯಲ್ಲಿ ಅಧಿವೇಶನ: ನಗರದ ರಸ್ತೆಗಳಿಗೆ ದುರಸ್ತಿ ಭಾಗ್ಯ
ಬೆಳಗಾವಿ, ನವೆಂಬರ್ 24: ಗಡಿನಾಡು ಬೆಳಗಾವಿಯಲ್ಲಿರುವ ಸುವರ್ಣ ವಿಧಾನಸೌಧ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ತಯಾರಾಗುತ್ತಿದೆ. ಡಿಸೆಂಬರ್ 9 ರಿಂದ 20ರ ತನಕ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಈಗಾಗಲೇ ದಿನಾಂಕವನ್ನು ನಿಗದಿ ಮಾಡಲಾಗಿದೆ. ಬೆಳಗಾವಿ ಜಿಲ್ಲಾಡಳಿತ ಅಧಿವೇಶನಕ್ಕೆ ಬರುವ ಶಾಸಕರು, ಸಚಿವರು, ಅಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸಿದ್ಧತೆಯನ್ನು ಕೈಗೊಳ್ಳುತ್ತಿದೆ. ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಜಿಲ್ಲಾಡಳಿತಕ್ಕೆ ಹಲವು ಸೂಚನೆಗಳನ್ನು ನೀಡಿದ್ದಾರೆ.
ವಿಧಾನಮಂಡಲದ ಚಳಿಗಾಲ ಅಧಿವೇಶನದ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಉಪ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, "ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 9 ರಿಂದ ನಡೆಯಲಿದೆ. ಪ್ರತಿವರ್ಷದಂತೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಥತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಸತಿ, ಸಾರಿಗೆ ಮತ್ತು ಊಟೋಪಹಾರ ಸೇರಿದಂತೆ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಬೇಕು" ಎಂದು ತಿಳಿಸಿದರು.
ರಸ್ತೆಗಳ ದುರಸ್ತಿ ಕಾರ್ಯ: ಸಚಿವರು ಮಾತನಾಡಿ, "ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ ಮೂಲಕ ಉತ್ತಮ ವ್ಯವಸ್ಥೆಯನ್ನು ಖಚಿತಪಡಿಸಬೇಕು. ಇದರೊಂದಿಗೆ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಅಂಬುಲೆನ್ಸ್ಗಳನ್ನು ನಿಯೋಜಿಸಬೇಕು" ಎಂದರು.
"ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್ಗಳಲ್ಲಿ ಹಾಗೂ ಮೊಗಸಾಲೆಯಲ್ಲಿ ಪಾವತಿ ಆಧಾರದ ಮೇಲೆ ವಿವಿಧ ಬಗೆಯ ಚಹಾ ಹಾಗೂ ಅಲ್ಪೋಪಹಾರ ವ್ಯವಸ್ಥೆ ಕಲ್ಪಿಸುವಂತೆ" ಸಚಿವರು ಸೂಚನೆಯನ್ನು ನೀಡಿದರು.
ನಗರದ ರಸ್ತೆಗಳು ಸೇರಿದಂತೆ ನಗರ ಪ್ರವೇಶಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು, ಆದಷ್ಟು ಬೇಗ ಪೂರ್ಣಗೊಳಿಸಬೇಕು. ವಸತಿ, ಸಾರಿಗೆ ಹಾಗೂ ಊಟೋಪಹಾರ ವ್ಯವಸ್ಥೆ ಸೇರಿದಂತೆ ಸುಗಮ ಅಧಿವೇಶನಕ್ಕಾಗಿ 10 ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಬಾರಿಯಂತೆ ವಿವಿಧ ಸ್ಥಳಗಳಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಹೈಸ್ಪೀಡ್ ಸಾಮರ್ಥ್ಯದ ಅಂತರ್ಜಾಲ ಸಂಪರ್ಕ, ಕಂಪ್ಯೂಟರ್, ಲೇಖನ ಸಾಮಗ್ರಿಗಳು ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಅಧಿವೇಶನದಲ್ಲಿ ಭಾಗವಹಿಸುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಪಾಸ್ ವ್ಯವಸ್ಥೆ ಮಾಡಲಾಗುತ್ತಿದೆ. ಸುವರ್ಣ ಸೌಧದ ಮುಖ್ಯ ಪ್ರವೇಶ ದ್ವಾರದಿಂದ ಒಳಗಡೆ ಆವರಣದವರೆಗೆ ಸಾರ್ವಜನಿಕರಿಗೆ ಕರೆದೊಯ್ಯಲು ಉಚಿತ ಬಸ್ ವ್ಯವಸ್ಥೆ ಕೂಡ ಈ ಬಾರಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾತನಾಡಿ, ಅಂದಾಜು 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪ್ರತಿವರ್ಷದಂತೆ ಬಿಗಿ ಭದ್ರತೆ ಕಲ್ಪಿಸಲಾಗುವುದು. ಸುವರ್ಣಸೌಧದ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಲ್ಲೂ ಅಗತ್ಯ ಬಂದೋಬಸ್ತ್ ಮಾಡಲಾಗುವುದು. ಇದಲ್ಲದೇ ಸಾರಿಗೆ ನಿರ್ವಹಣೆಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಅಧಿವೇಶನ ಬಂದೋಬಸ್ತ್ಗೆ ಆಗಮಿಸುವ ಪೊಲೀಸ್ ಹಾಗೂ ಕೆಎಸ್ಆರ್ಪಿ ಸಿಬ್ಬಂದಿಗೆ ಅಗತ್ಯ ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಬೆಳಗಾವಿ ಉಪ ಪೊಲೀಸ್ ಆಯುಕ್ತ ರೋಹನ್ ಜಗದೀಶ್ ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 16ನೇ ವಿಧಾನಸಭೆಯ 5ನೇ ಅಧಿವೇಶನದ ಕಲಾಪಗಳನ್ನು ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಡಿಸೆಂಬರ್ 9, 10, 11, 12, 13, 16, 17, 18, 19 ಮತ್ತು 20ರಂದು ಕಲಾಪಗಳು ನಡೆಯಲಿವೆ. ಪ್ರತಿವರ್ಷದಂತೆ ಈ ಬಾರಿಯು ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲಾಗುತ್ತದೆ.












Click it and Unblock the Notifications