Breaking; ಸಂತೋಷ್ ಪಾಟೀಲ್ ಆತ್ಮಹತ್ಯೆ, 11 ಲಕ್ಷ ಪರಿಹಾರ ವಿತರಣೆ
ಬೆಳಗಾವಿ, ಏಪ್ರಿಲ್ 21; ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ 11 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಈ ಆತ್ಮಹತ್ಯೆ ಪ್ರಕರಣ ರಾಜ್ಯದ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆ ಸಹ ನೀಡಿದ್ದರು.
ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಳಗಾವಿಯ ಬಡಸ್ ಗ್ರಾಮದ ನಿವಾಸಕ್ಕೆ ಭೇಟಿ ನೀಡಿ ಸಂತೋಷ್ ಪಾಟೀಲ್ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷದ ಚೆಕ್ ವಿತರಣೆ ಮಾಡಿದರು. ಸಂತೋಷ್ ಪಾಟೀಲ್ ಮೃತಪಟ್ಟಾಗ ಕಾಂಗ್ರೆಸ್ ನಾಯಕರು ಪರಿಹಾರ ಘೋಷಣೆ ಮಾಡಿದ್ದರು.
ಇದರ ಹೊರತಾಗಿ ಮಾಜಿ ಸಂಸದರಾದ ಪ್ರಕಾಶ್ ಹುಕ್ಕೇರಿ ವೈಯಕ್ತಿಕವಾಗಿ 5 ಲಕ್ಷ ಮೌಲ್ಯದ ಪರಿಹಾರದ ಚೆಕ್ ನೀಡಿದರು. ಈ ವೇಳೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೆ ಮುನ್ನ ಕಳಿಸಿರುವ ವಾಟ್ಸಪ್ ಸಂದೇಶದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಹೆಸರು ಪ್ರಸ್ತಾಪಿಸಿದ್ದರು.
ಏಪ್ರಿಲ್ 13ರಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿತ್ತು. ಆಗ ಸಂತೋಷ್ ಕುಟುಂಬಕ್ಕೆ 11 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಉಡುಪಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಬಂಧಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ.











Click it and Unblock the Notifications