ಅವರು ಡಿಸಿಎಂ ಅಲ್ಲ, ಸಿಎಂ ಆಗುವ ಅರ್ಹತೆ ಇದೆ; ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದು ಯಾರಿಗೆ?
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಮತ್ತು 32 ಜನ ಸಚಿವರಾಗಿ ಸರ್ಕಾರದ ಭಾಗವಾಗಿದ್ದಾರೆ.
ಇದೇ ವೇಳೆ ಬೆಳಗಾವಿ ಜಿಲ್ಲೆಗೆ ಈ ಬಾರಿ 2 ಸಚಿವ ಸ್ಥಾನ ದೊರೆತಿದೆ. ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮಂತ್ರಿಮಂಡಲದಲ್ಲಿ ಸ್ಥಾನ ಪಡೆದಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿ ಶಾಸಕಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಮೊದಲ ಬಾರಿಗೆ ಸಚಿವೆಯಾಗಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಭಾನುವಾರದಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗಳೊಂದಿಗೆ ಮಾತನಾಡಿದರು.
"ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಲ್ಲ, ಮುಂದೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ. ಸತೀಶ್ ಜಾರಕಿಹೊಳಿ ಅವರು ಇಂದಲ್ಲ, ನಾಳೆ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು," ಎಂದು ನೂತನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ ಹೆಚ್ಚಳ ಹೇಳಿಕೆಗೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, "ಮೊದಲನೆಯದಾಗಿ ಅಧಿಕೃತವಾಗಿ ಖಾತೆ ಹಂಚಿಕೆ ಆಗಬೇಕು. ಇಲಾಖಾವಾರು ಅಧಿಕಾರ ತೆಗೆದುಕೊಂಡು ಸಭೆ ಮಾಡಬೇಕು. ನಾವು ಏನು ವಾಗ್ದಾನ ಮಾಡಿದ್ದೇವೆ, ಅವುಗಳನ್ನು ಸಂಪೂರ್ಣ ಮಾಡಲು ಪ್ರಯತ್ನಿಸುತ್ತೇವೆ," ಎಂದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೃಹ ಕಚೇರಿಯಲ್ಲಿ ಗ್ರಾಮೀಣ ಕ್ಷೇತ್ರದ ವಿವಿಧ ಮಹಿಳಾ ಸಂಘಟನೆಗಳ ವತಿಯಿಂದ ಭಾನುವಾರ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಅವರು, "ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ, ವಿಶೇಷವಾಗಿ ಮಹಿಳೆಯರಿಗೆ ನೆಮ್ಮದಿಯ ಜೀವನ ಕಲ್ಪಿಸಿಕೊಡುವುದಾಗಿ," ಭರವಸೆ ನೀಡಿದರು.
"ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 200 ಯೂನಿಟ್ ಉಚಿತ ವಿದ್ಯುತ್ ಮೊದಲಾದ ಯೋಜನೆಗಳಿಂದ ಮಹಿಳೆಯರಿಗೆ ನೆಮ್ಮದಿಯ ಜೀವನ ಲಭಿಸಲಿದೆ. ಅದನ್ನು ಮೊದಲ ಆದ್ಯತೆಯ ಮೇಲೆ ಜಾರಿಗೊಳಿಸಲಾಗುವುದು," ಎಂದರು.

"ಬೆಳಗಾವಿ ಜಿಲ್ಲೆ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಾನು ಇಡೀ ಗ್ರಾಮೀಣ ಕ್ಷೇತ್ರದ ಮನೆ ಮಗಳು. ಇಡೀ ಕ್ಷೇತ್ರದ ಜನರ ಆಶಿರ್ವಾದದಿಂದಾಗಿ ನಾನು ಸಚಿವೆಯಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿರುತ್ತೇನೆ," ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಇದಕ್ಕೂ ಮೊದಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರು ನೂತನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಅಲ್ಲಿಂದ ಸುಳೇಬಾವಿಗೆ ತೆರಳಿ ಮಹಾಲಕ್ಷ್ಮೀಯ ದರ್ಶನ, ಆಶೀರ್ವಾದ ಪಡೆದರು. ಬಳಿಕ ಹಿಂಡಲಗಾ ಗಣಪತಿ ದರ್ಶನ ಪಡೆದು, ರಾಜಹಂಸಗಡಕ್ಕೆ ತೆರಳಿ ಛತ್ರಪತಿ ಶಿವಾಜಿ ಮಹಾರಾಜರ ಪಾದಕ್ಕೆ ನಮಿಸಿದರು.












Click it and Unblock the Notifications