ಕಮಲ್ ಪಂತ್ ಕುರಿತು ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಜಾರಕಿಹೊಳಿ
ಬೆಳಗಾವಿ, ಆಗಸ್ಟ್ 21: "ಮಿಸ್ಟರ್' ಎಂಬ ಪದವನ್ನು ಸಾಮಾನ್ಯವಾಗಿ ಬಳಕೆ ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಿಸ್ಟರ್ ಅಂದಿದ್ದರಲ್ಲಿ ತಪ್ಪೇನಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಹೀಗೆ ಮಾಡದಂತೆ ನಮ್ಮ ಅಧ್ಯಕ್ಷರು ಆಯುಕ್ತರಿಗೆ ಹೇಳಿದ್ದಾರೆ ಎಂದರು.
ಈ ವೇಳೆ ಮಿಸ್ಟರ್ ಎಂಬ ಪದವನ್ನು ಡಿ.ಕೆ ಶಿವಕುಮಾರ್ ಬಳಸಿದ್ದಾರೆ. ಇದನ್ನು ಬಿಜೆಪಿಯ ಕೆಲ ನಾಯಕರು ಧಮ್ಕಿ ಹಾಕಿದ್ದಾರೆ ಎನ್ನುತ್ತಿದ್ದಾರೆ. ಈ ಮೊದಲು ಬಿಜೆಪಿ ನಾಯಕರು ಕೂಡ ಹೀಗೆ ನಡೆದುಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದರೂ ಕಂದಾಯ ಸಚಿವರು ಮಾತ್ರ ಇತ್ತ ಬರುತ್ತಿಲ್ಲ. ಕಂದಾಯ ಸಚಿವರು ಕೇವಲ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಈ ಭಾಗದ ಜನರು ಎಷ್ಟೇ ಸಮಸ್ಯೆ ಎದುರಿಸುತ್ತಿದ್ದರೂ ಕಂದಾಯ ಸಚಿವ ಆರ್.ಅಶೋಕ್ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ಕಳೆದ ವರ್ಷದ ಪ್ರವಾಹದ ಸಂದರ್ಭದಲ್ಲೂ ಆರ್.ಅಶೋಕ್ ಅವರು ಉತ್ತರ ಕರ್ನಾಟಕ ಪ್ರವಾಸ ಮಾಡಿರಲಿಲ್ಲ. ಸಚಿವರು ಬೆಂಗಳೂರು ಬಿಟ್ಟು ಹೊರಬಂದು ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ಆಗ್ರಹಿಸಿದರು.












Click it and Unblock the Notifications