ಅಜ್ಞಾತ ಸ್ಥಳದಿಂದ ಹೊರಬಂದು ಸಾರ್ವಜನಿಕವಾಗಿ ಕಾಣಿಸಿಕೊಂಡ ಸತೀಶ್ ಜಾರಕಿಹೊಳಿ
ಬೆಳಗಾವಿ, ಮಾರ್ಚ್ 4: ಸಹೋದರ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಹಿರಂಗದಿಂದ ಮುಜುಗರಕ್ಕೆ ಒಳಗಾಗಿ ಅಜ್ಞಾತ ಸ್ಥಳದಲ್ಲಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಗುರುವಾರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ತಾವು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪಾಶ್ಚಾಪುರ ಗ್ರಾಮದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ಸೇತುವೆ (ಬ್ರಿಜ್) ನಿರ್ಮಾಣ ಕಾಮಗಾರಿಗೆ ಅವರು ಗುರುವಾರ ಭೂಮಿಪೂಜೆ ನೆರವೇರಿಸಿದರು.
ರಮೇಶ್ ಜಾರಕಿಹೊಳಿ ರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಅಭಿಮಾನಿಗಳ ಪ್ರತಿಭಟನೆ
ನಂತರ ಮಾತನಾಡಿದ ಸತೀಶ್ ಜಾರಕಿಹೊಳಿ, ""8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸೇತುವೆ ನಿರ್ಮಿಸಲಾಗುತ್ತಿದೆ. ಇದರಿಂದ ಸುತ್ತಲಿನ 8 ಗ್ರಾಮಗಳ ಜನರಿಗೆ ಸಂಚಾರಕ್ಕೆ ಅನುಕೂಲವಾಗಲಿದೆ'' ಎಂದು ಹೇಳಿದರು.
ಪಾಶ್ಚಾಪುರದಲ್ಲಿ ಮೊದಲಿನಿಂದಲೂ ನೀರಿನ ಸಮಸ್ಯೆ ಇತ್ತು. ನಮ್ಮ ಅವಧಿಯಲ್ಲಿ ತಕ್ಕಮಟ್ಟಿಗೆ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಶೀಘ್ರವೇ ಹಿಡಕಲ್ ಡ್ಯಾಂ ನಿಂದ ಗ್ರಾಮಕ್ಕೆ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಕೆರೆಗಳನ್ನು ತುಂಬಿಸುವುದರಿಂದ ಸುತ್ತಲಿನ ನಾಲ್ಕೈದು ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಹೀಗಾಗಿ, ಯಮಕನಮರಡಿ ಮತ ಕ್ಷೇತ್ರದ 20 ಕೆರೆಗಳಿಗೆ ನೀರು ತುಂಬಿಸಲಾಗಿದೆ. ಈ ವರ್ಷವೂ ಕ್ಷೇತ್ರದಲ್ಲಿ 4 ಕೆರೆಗಳನ್ನು ತುಂಬಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.