ಬೆಳಗಾವಿಯಲ್ಲಿ ಮಳೆ; ಕಾಳಜಿ ಕೇಂದ್ರ, ಗೋ ಶಾಲೆ ಆರಂಭಕ್ಕೆ ಸೂಚನೆ
ಬೆಳಗಾವಿ, ಜುಲೈ 25; ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರೂ ಕೆಲವೆಡೆ ಬರದ ಛಾಯೆ ಇದೆ. ಜೂನ್ ತಿಂಗಳಿನಲ್ಲಿ ಶೇ 68ರಷ್ಟು ಕಡಿಮೆ ಮಳೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ಶೇ 47ರಷ್ಟು ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯಲ್ಲಿ ಗೋಶಾಲೆ, ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ 2023-24ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳು ಸೇರಿದಂತೆ) ಜೂನ್ 2023 ಅಂತ್ಯದವರೆಗಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮಳೆ, ಬರಗಾಲದ ಕುರಿತು ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರೂ ಕೆಲವೆಡೆ ಬರದ ಛಾಯೆ ಇದೆ. ಆದ್ದರಿಂದ ಅವಶ್ಯಕತೆ ಆಧರಿಸಿ ಕಾಳಜಿ ಕೇಂದ್ರಗಳು, ಮೇವಿನ ಕೊರತೆ ಇರುವ ಕಡೆಗಳಲ್ಲಿ ಗೋಶಾಲೆ ಆರಂಭಿಸಬೇಕು ಎಂದು ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನರೇಗಾ ಯೋಜನೆ ಅನುಷ್ಠಾನ; ಸಭೆಯಲ್ಲಿ ನರೇಗಾ ಯೋಜನೆಯಡಿ ಹೊಲಗಳಿಗೆ ಹೋಗುವ ರಸ್ತೆಗಳನ್ನು ನಿರ್ಮಿಸಿಕೊಡಲು ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು. 2019-20ನೇ ಸಾಲಿನಲ್ಲಿ ಪ್ರವಾಹ/ ಅತಿವೃಷ್ಟಿ ಯಿಂದ ಮನೆ ಕಳೆದುಕೊಂಡಿರುವವರಿಗೆ ಪರಿಹಾರ ಒದಗಿಸಲು ಅನುಕೂಲವಾಗುವಂತೆ ಕೂಡಲೇ ಮರು ಸಮೀಕ್ಷೆ ಮಾಡಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಕಳಿಸಬೇಕು ಎಂದು ಸಚಿವರು ಹೇಳಿದರು.
ಅಥಣಿ ಭಾಗದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆಯನ್ನು ನಡೆಸಿ ವಿಮಾ ಯೋಜನೆ ಸೇರಿದಂತೆ ಅಗತ್ಯವಿರುವ ಮಾಹಿತಿಯನ್ನು ನೀಡಬೇಕು. ಜಿಲ್ಲೆಯ ಕೆಲವೆಡೆ ಬರಗಾಲ ಪರಿಸ್ಥಿತಿ ಇರುವ ಬಗ್ಗೆ ಶಾಸಕರು ಸಭೆಯ ಗಮನಸೆಳೆದರು. ಮೇವಿನ ಕೊರತೆ ಇದ್ದಲ್ಲಿ ಅಗತ್ಯತೆ ಆಧರಿಸಿ ಗೋಶಾಲೆಗಳನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಖುದ್ದಾಗಿ ಪರಿಶೀಲಿಸಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ವಾಡಿಕೆಗಿಂತ ಶೇ 11ರಷ್ಟು ಮಳೆ ಕೊರತೆ; ಜೂನ್ ತಿಂಗಳಿನಲ್ಲಿ ಶೇ. 68ರಷ್ಟು ಕಡಿಮೆ ಮಳೆಯಾಗಿತ್ತು. ಜುಲೈ ತಿಂಗಳಿನಲ್ಲಿ ಶೇ 47ರಷ್ಟು ಹೆಚ್ಚಿನ ಮಳೆಯಾಗಿದೆ. ಎರಡೂ ತಿಂಗಳ ವಾಡಿಕೆಗಿಂತ ಶೇ 11ರಷ್ಟು ಕಡಿಮೆ ಮಳೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದರು.
2.40 ಲಕ್ಷ ಕ್ಯೂಸೆಕ್ ನೀರು ಒಳಹರಿವು ಇದ್ದಾಗ ಪ್ರವಾಹ ಸಾಧ್ಯತೆ ಇರುತ್ತದೆ. ಸದ್ಯಕ್ಕೆ 1.14 ಲಕ್ಷ ಕ್ಯೂಸೆಕ್ ಒಳಹರಿವು ಇರುವುದರಿಂದ ಯಾವುದೇ ಆತಂಕವಿಲ್ಲ ಎಂದು ತಿಳಿಸಿದರು. ವೇದಗಂಗಾ-ದೂಧಗಂಗಾ ನದಿಗಳಲ್ಲಿ ಒಳಹರಿವು ಹೆಚ್ಚಿನ ಪ್ರಮಾಣದಲ್ಲಿದೆ. ಈಗಾಗಲೇ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯಬಿದ್ದರೆ ಕೂಡಲೇ ಜನರನ್ನು ಸ್ಥಳಾಂತರಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಇದುವರೆಗೆ ಶೇ.68ರಷ್ಟು ಬಿತ್ತನೆಯಾಗಿದೆ. ಹಿಂದಿನ ವರ್ಷಗಳಲ್ಲಿ ಮನೆಹಾನಿಯಾಗಿರುವ ಪ್ರಕರಣಗಳಲ್ಲಿ ಕಳೆದ ಎರಡು ತಿಂಗಳಲ್ಲಿ 52 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ಬೆಳೆವಿಮೆ ಪರಿಹಾರ ನಿಗದಿಪಡಿಸುವಲ್ಲಿ ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿರುವ ತಾರತಮ್ಯ ಮತ್ತು ಅಕ್ರಮಗಳನ್ನು ತಡೆಗಟ್ಟಲು ಕೃಷಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನು ಸರಿಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ನೂತನ ಜಿಲ್ಲಾಧಿಕಾರಿಗಳ ಕಚೇರಿ; ಸಭೆಯಲ್ಲಿ ಬೆಳಗಾವಿ ನಗರದಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕುರಿತು ಚರ್ಚೆ ನಡೆಯಿತು. ಸದ್ಯಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಭ್ಯವಿರುವ ಒಟ್ಟಾರೆ 9 ಎಕರೆ ಜಾಗೆಯಲ್ಲಿ 2 ಎಕರೆ ಜಾಗ ಬಳಸಿಕೊಂಡು ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸಲು ಉದ್ಧೇಶಿಸಲಾಗಿದೆ. ಉಳಿದ ಜಾಗದಲ್ಲಿ ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ಈ ಯೋಜನೆ ಕುರಿತು ಜನ ಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಬೇಕು ಎಂದು ಸಚಿವರು ತಿಳಿಸಿದರು.












Click it and Unblock the Notifications