ಕಾಂಗ್ರೆಸ್ 'ರೆಬೆಲ್' ಆನಂದ್ ಚೋಪ್ರಾ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ, ಜುಲೈ 29: ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ಆನಂದ್ ಚೋಪ್ರಾ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅವರ ಹತ್ಯೆಗೆ ಯತ್ನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಶನಿವಾರ ರಾತ್ರಿ ವೇಳೆ ಸವದತ್ತಿಯ ಹೂಲಿ ರಸ್ತೆಯಲ್ಲಿ ಬೈಕಿನಲ್ಲಿ ಆನಂದ್ ಅವರು ತೆರಳುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು, ಏಕಾಏಕಿ ದಾಳಿ ನಡೆಸಿ ಲಾಂಗ್ ಮತ್ತು ರಾಡ್ಗಳಿಂದ ಹಲ್ಲೆ ನಡೆಸಿದ್ದಾರೆ.
ಆನಂದ್ ಅವರ ಕುತ್ತಿಗೆ ಹಾಗೂ ತಲೆಗೆ ಗಂಭೀರ ಗಾಯಗಳಾಗಿವೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಚೋಪ್ರಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಆನಂದ್ ಮಾಮನಿ ವಿರುದ್ಧ ಆನಂದ್ ಚೋಪ್ರಾ ಅವರು 6291 ಮತಗಳ ಅಂತರದಿಂದ ಸೋಲು ಕಂಡಿದ್ದರು. ರಾಜಕೀಯ ವೈಷಮ್ಯದಿಂದಲೇ ಇವರ ಮೇಲೆ ಕೊಲೆಗೆ ಯತ್ನಿಸಲಾಗಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.