ಜನವರಿಯಿಂದ ಶಿರಾಡಿ ಘಾಟ್ನಲ್ಲಿ ವಾಹನ ಸಂಚಾರ ಬಂದ್
ಬೆಳಗಾವಿ, ನವೆಂಬರ್ 14 : 'ಜನವರಿಯಿಂದ ಏಪ್ರಿಲ್ ತನಕ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುತ್ತದೆ' ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಕಾಂಕ್ರೀಟ್ ರಸ್ತೆ ಕಾಮಗಾರಿ, ಶಿರಾಡಿ ಬಂದ್
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. 2ನೇ ದಿನದ ಕಲಾಪಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.
'ಶಿರಾಡಿ ಘಾಟ್ ರಸ್ತೆಯನ್ನು ಸಂಪೂರ್ಣ ಕಾಂಕ್ರೀಟ್ ರಸ್ತೆಯಾಗಿ ಮಾಡಲು ಸರ್ಕಾರ ಉದ್ದೇಶಿಸಿದೆ. ಅರ್ಧ ಭಾಗವನ್ನು ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತೆ ಉಳಿದ 26 ಕಿ.ಮೀ. ಕಾಮಗಾರಿಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ' ಎಂದರು.
ಶಿರಾಡಿ ಘಾಟ್ 2ನೇ ಹಂತದ ಕಾಮಗಾರಿ ಟೆಂಡರ್ ರದ್ದು
'13 ಕಿ.ಮೀ ಕಾಂಕ್ರೀಟ್ ಕಾಮಗಾರಿ ಮುಗಿದಿದೆ. ಗುತ್ತಿಗೆದಾರರ ಸಮಸ್ಯೆಯಿಂದ ಕಾಮಗಾರಿ ಸ್ಥಗಿತವಾಗಿತ್ತು. ಜನವರಿಯಿಂದ ಮತ್ತೆ ಕಾಮಗಾರಿ ಆರಂಭಿಸಿ ಏಪ್ರಿಲ್ನಲ್ಲಿ ಪೂರ್ಣಗೊಳಿಸಲಾಗುತ್ತದೆ' ಎಂದು ಸಚಿವರು ಉತ್ತರ ನೀಡಿದರು.
'ಕಾಮಗಾರಿ ನಡೆಯುವ ವೇಳೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗುತ್ತದೆ. ಚಾರ್ಮಾಡಿ ಘಾಟ್ ಮೂಲಕ ಪರ್ಯಾಯ ರಸ್ತೆ ಸೌಲಭ್ಯ ಕಲ್ಪಿಸಲಾಗುತ್ತದೆ' ಎಂದು ಸಚಿವರು ವಿವರಣೆ ನೀಡಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆ ಸೇತುವೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆ ಸೇತುವೆ ತನಕ 12.37 ಕಿ.ಮೀ.ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡುವ ಕಾಮಗಾರಿ ಬಾಕಿ ಇದೆ.