ಬೆಳಗಾವಿಯಲ್ಲಿ ಪ್ರಚೋದನಾಕಾರಿ ಭಾಷಣ: ಸಂಸದ ಸಂಜಯ್ ರಾವತ್ಗೆ ಷರತ್ತುಬದ್ಧ ಜಾಮೀನು
2018 ರಲ್ಲಿ ಬೆಳಗಾವಿಯಲ್ಲಿ ಕನ್ನಡಿಗರ ವಿರುದ್ಧ ಪ್ರಚೋದನಾತ್ಮಕ ಭಾಷಣ ಮಾಡಿದ್ದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಬೆಳಗಾವಿ, ಫೆಬ್ರವರಿ. 08: ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ವಕ್ತಾರ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
2018 ರಲ್ಲಿ ಸಂಸದ ಸಂಜಯ್ ರಾವತ್ ಖಾಸಗಿ ಕಾರ್ಯಕ್ರಮಕ್ಕೆ ಬೆಳಗಾವಿಗೆ ಬಂದಿದ್ದರು. ಆಗ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿತ್ತು. ಆ ಕಾರ್ಯಕ್ರಮದಲ್ಲಿ ಮಾಡಿದ್ದ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
50 ಸಾವಿರ ರೂಪಾಯಿಯ ಬಾಂಡ್ ಮತ್ತು ನಿಗದಿತ ಸಮಯದಲ್ಲಿ ಕೋರ್ಟ್ಗೆ ಹಾಜರಾಗಬೇಕೆಂದು ಷರತ್ತು ವಿಧಿಸಿ, ಜಾಮೀನು ಮಂಜೂರು ಮಾಡಲಾಗಿದೆ.

ಬೆಳಗಾವಿಯಲ್ಲಿ 2018ರಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸಂಜಯ್ ರಾವತ್, ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಕನ್ನಡಿಗರ ವಿರುದ್ಧ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಇತ್ತು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು.
ಆ ಪ್ರಕರಣದಲ್ಲಿ ಬೆಳಗಾವಿ ನ್ಯಾಯಾಲಯ ಸಂಜಯ್ ರಾವತ್ ಗೆ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದ ವಿಚಾರಣೆ ಬುಧವಾರ ನಡೆಯಿತು. ಸಂಸದ ಸಂಜಯ್ ರಾವತ್ ಪರವಾಗಿ, ವಕೀಲ ಶ್ಯಾಂಸುಂದರ್ ಪತ್ತಾರ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಬಳಿಕ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಜಾಮೀನಿನಿಂದ ರಾವತ್ಗೆ ರಿಲೀಫ್ ಸಿಕ್ಕಿದೆ.
ಪ್ರಸ್ತುತ ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಕಳೆದ ಕೆಲ ದಿನಗಳಿಂದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಯಕರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡದಂತೆ ನಿರ್ಬಂಧ ಹೇರಲಾಗಿದೆ. ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಯಕರು ಪದೇ ಪದೇ ಹೇಳಿಕೆ ನೀಡುತ್ತಿರುವುದರಿಂದ ರಾಜ್ಯ ಸರ್ಕಾರದ ಮೂಲಕ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.












Click it and Unblock the Notifications