ಬೆಳಗಾವಿಯಲ್ಲಿ ಕನಿಷ್ಠ 12 ಸೀಟು ಗೆಲ್ಲಬೇಕು: ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಏಪ್ರಿಲ್ 11: ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿ ಆಗಿದ್ದು. ಜಿಲ್ಲೆಯ 18 ಕ್ಷೇತ್ರಗಳಲ್ಲಿ ಕನಿಷ್ಠ 12 ಕ್ಷೇತ್ರಗಳನ್ನಾದರೂ ಗೆಲ್ಲಲೇ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಕಾಂಗ್ರೆಸ್ ಮುಖಂಡರಿಗೆ ತಾಕೀತು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಮುಖಂಡರು ಟಿಕೆಟ್ಗಾಗಿ ಇಂದು ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತನಾಡಿದರು. ಎರಡು ದಿನದಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ ಬೀಡು ಬಿಟ್ಟಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೋಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದ ಪ್ರಕಾಶ ಹುಕ್ಕೇರಿ, ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ್ ಹಾಗೂ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ವಿನಯ್ ನವಲಗಟ್ಟಿ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಟಿಕೆಟ್ ಕುರಿತು ಮಾತನಾಡಿದರು.

ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಭ್ಯರ್ಥಿಗಳ ಆಯ್ಕೆ ಹಾಗೂ ಅವರನ್ನು ಗೆಲ್ಲಿಸಿಕೊಂಡು ಬರುವ ಸಂಪೂರ್ಣ ಜವಾಬ್ದಾರಿಯನ್ನ ಜಾರಕಿಹೋಳಿ ಸಹೋದರರಿಗೆ ವಹಿಸಿದ್ದೇವೆ. ಅವರೇ ಅಭ್ಯರ್ಥಿಗಳನ್ನ ಫೈನಲ್ ಮಾಡುತ್ತಾರೆ, ಯಾರಿಗೇ ಟಿಕೆಟ್ ಸಿಕ್ಕರೂ ಕಾಂಗ್ರೆಸ್ನ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಿ ಎಂದರು.
ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗಿಲ್ಲವಾದ್ದರಿಂದ ಬೆಳಗಾವಿ ಕಾಂಗ್ರೆಸ್ ಮುಖಂಡರು ಇನ್ನೂ ಬೆಂಗಳೂರಲ್ಲಿಯೇ ಬೀಡುಬಿಟ್ಟು ಟಿಕೆಟ್ ಗಿಟ್ಟಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ. ಏ.13ರಂದು ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.












Click it and Unblock the Notifications