ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಸಿಎಂ ನಿರ್ಧಾರವೇ ಅಂತಿಮ
ಬೆಳಗಾವಿ, ಸೆ. 18 : 'ಸಚಿವ ಸಂಪುಟ ಪುನಾರಚನೆ ಮತ್ತು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟಿದ್ದು, ಈ ಕುರಿತು ಅವರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ' ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಸರ್ಕಾರಕ್ಕೆ ಜನಾದೇಶ ಸಿಕ್ಕಿದೆ. ಶಾಸಕರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಆದ್ದರಿಂದ ಸಂಪುಟ ವಿಸ್ತರಣೆ ಬಗ್ಗೆ ಅವರು ಅಂತಿಮ ತೀರ್ಮಾನ ಕೈಗೊಳ್ಳಬೇಕು. ಅವರು ತೀರ್ಮಾನ ಕೈಗೊಂಡರೆ ಎಐಸಿಸಿ ಒಪ್ಪಿಗೆ ನೀಡಲಿದೆ ಎಂದರು.

ಸಚಿವ ಸಂಪುಟದಲ್ಲಿ ಸಕ್ರಿಯ ಮತ್ತು ನಿಷ್ಕ್ರಿಯ ಸಚಿವರು ಇರುವುದು ಸಾಮಾನ್ಯ ಯಾರನ್ನು ಸಂಪುಟದಿಂದ ಕೈಬಿಡಬೇಕು, ಯಾರನ್ನು ಸೇರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿರ್ಮಾನ ಕೈಗೊಳ್ಳಬೇಕು ಎಂದು ದಿಗ್ವಿಜಯ್ ಸಿಂಗ್ ಹೇಳಿದರು. ಉಪ ಮುಖ್ಯಮಂತ್ರಿ ಹುದ್ದೆಯ ಸೃಷ್ಟಿ ಬಗ್ಗೆಯೂ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. [ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಸಿಎಂ]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬಡವರು ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅವರು ಜಾರಿಗೆ ತಂದಿದ್ದಾರೆ. ಮೇಲ್ವರ್ಗದ ಜನರ ಅಭಿವೃದ್ಧಿಗಾಗಿಯೂ ಶ್ರಮಿಸುತ್ತಿದ್ದಾರೆ. ರೈತರು, ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಸಿಂಗ್ ತಿಳಿಸಿದರು. [ದಸರಾ ನಂತರ ನಿಗಮ-ಮಂಡಳಿಗಳಿಗೆ ನೇಮಕಾತಿ]
ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ : ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಬಾರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವುದಿಲ್ಲ ಎಂದು ಹೇಳಿದ್ದಾರೆ. ಸೆ.4ರಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮರಳಿದ ಬಳಿಕವೂ ಸಿಎಂ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಹೇಳಿಕೆ ನೀಡಿಲ್ಲ. ದಸರಾ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.











Click it and Unblock the Notifications