ಎಂಇಎಸ್ನವರು ಪುಂಡರು, ಪೊಲೀಸರ ಭಯವಿಲ್ಲ; ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 20; "ಎಂಇಎಸ್ನವರು ಪುಂಡರು, ಅವರಿಗೆ ಪೊಲೀಸರ ಭಯವಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.
ಸೋಮವಾರ ಸಿದ್ದರಾಮಯ್ಯ ಬೆಳಗಾವಿಯ ಅನಗೋಳಕ್ಕೆ ಭೇಟಿ ನೀಡಿದರು. ಕಿಡಿಗೇಡಿಗಳು ಆ ಪ್ರದೇಶದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದರು. ಈ ಹೊಸ ಪ್ರತಿಮೆ ಸ್ಥಾಪಿಸಲಾಗಿದೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, "ಕೆಲ ಪುಂಡರು ಪ್ರತಿಮೆ ವಿರೂಪಗೊಳಿಸುವ ಕೆಲಸ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಕೆಲಸ" ಎಂದರು.

"ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿಗೆ ಸೇರಿದ ವ್ಯಕ್ತಿಯಲ್ಲ. ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
"ಎಂಇಎಸ್ ನಿಷೇಧ ಮಾಡಬೇಕು ಎಂಬ ಒತ್ತಾಯ ಇದೆ. ಈ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಧರಣಿ ಮಾಡಲು ಅವಕಾಶ ಇರಬೇಕು. ಕನ್ನಡ ಸಂಘಟನೆಗಳಿಗೆ ಅವಕಾಶ ಮಾಡಿಕೊಡಬೇಕು" ಎಂದು ಒತ್ತಾಯಿಸಿದರು.
ಪ್ರತಿಮೆ ವಿರೂಪಗೊಳಿಸಿದ್ದರು; ಬೆಳಗಾವಿಯ ಅನಗೋಳದಲ್ಲಿ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಕಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದರು. ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಈ ಘಟನೆ ನಡೆದಿತ್ತು.
ಈ ವಿಚಾರ ಕನ್ನಡಿಗರನ್ನು ಕೆರಳಿಸಿತ್ತು. ಪ್ರತಿಮೆ ವಿರೂಪಗೊಂಡ ಸುದ್ದಿ ತಿಳಿದ ತಕ್ಷಣ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಾಗೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಟಿಳಕವಾಡಿ ಪೊಲೀಸ್ ಠಾಣೆ ಮುಂದೆ ಜನರು ಜಮಾವಣೆಗೊಂಡು ಪ್ರತಿಭಟನೆಗಳು ನಡೆದ ಕಾರಣ ಬೆಳಗಾವಿ ತಾಲೂಕಿನಲ್ಲಿ ಡಿಸೆಂಬರ್ 22ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆಗೆ ಬೆಳಗಾವಿಗೆ ಆಗಮಿಸದಂತೆ ಎಲ್ಲರನ್ನೂ ಹಿರೇಬಾಗೇವಾಡಿ ಚೆಕ್ಪೋಸ್ಟ್ನಲ್ಲಿಯೇ ತಡೆಯಲಾಗಿದೆ.
ಬೆಳಗಾವಿ ವಿಚಾರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ನಮ್ಮ ಗೃಹ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ, ಅಲ್ಲಿರುವ ಕನ್ನಡಿಗರು, ಆಸ್ತಿ, ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪುಂಡಾಟಿಕೆ ವಿರುದ್ಧ ನಿರ್ಣಾಯಕ ಕ್ರಮ ಖಚಿತ" ಎಂದು ಹೇಳಿದರು.
ಕಾಂಗ್ರೆಸ್ ಚೇಲಾಗಳು ಮಾಡಿದ್ದಾರೆ; ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಪ್ರಕರಣದ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು, "ಇದನ್ನು ಯಾರು ಮಾಡಿಸಿದ್ದಾರೆಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಕಾಂಗ್ರೆಸ್ ಚೇಲಾಗಳು ಈ ರೀತಿಯ ಕೆಲಸ ಮಾಡಿದ್ದಾರೆ. ಎಂಇಎಸ್ ಮೊದಲಿನಿಂದಲೂ ಪುಂಡಾಟಿಕೆ ಮಾಡುತ್ತಾ ಬಂದಿದೆ. ಅವರಿಗೆ ಕುಮ್ಮಕ್ಕು ಕೊಡುವವರನ್ನು ಬಂಧಿಸುತ್ತೇವೆ" ಎಂದು ಹೇಳಿದರು.
ಎಂಇಎಸ್ ಪುಂಡಾಟಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬುಧವಾರ ಕರ್ನಾಟಕ ಬಂದ್ ಮಾಡುವ ಕುರಿತು ಸಂಜೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಎಂಇಎಸ್ ನಿಷೇಧ ಮಾಡಬೇಕು ಎಂದು ರಾಜ್ಯದಲ್ಲಿ ಒತ್ತಾಯ ಹೆಚ್ಚಾಗುತ್ತಿದೆ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣ ಗೌಡ ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮಕ್ಕೆ ಆಗಮಿಸಿದ್ದಾರೆ. ಸ್ಥಳೀಯ ಕಾರ್ಯರ್ತರು ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದು, ಪೊಲೀಸರು ಅವರನ್ನು ತಡೆಯಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.












Click it and Unblock the Notifications