ಲಾರಿ-ಖಾಸಗಿ ಬಸ್ ನಡುವೆ ಅಪಘಾತ; ಆರು ಮಂದಿ ಸಾವು, 20 ಮಂದಿ ಗಂಭೀರ
ಚಿಕ್ಕೋಡಿ, ಸೆಪ್ಟೆಂಬರ್ 12: ಮಹಾರಾಷ್ಟ್ರದ ಸತಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ಬೆಳ್ಳಂಬೆಳಿಗ್ಗೆ ಮಹಾರಾಷ್ಟ್ರದ ಸತಾರಾ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಮುಂಬೈನಿಂದ ಬೆಳಗಾವಿಗೆ ಬರುತ್ತಿದ್ದ ಎಸ್ಆರ್ಎಸ್ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಮುಂದೆ ಸಾಗುತ್ತಿದ್ದ ಲಾರಿ ಹಿಂಭಾಗಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ.

ಮೃತರಲ್ಲಿ ಮೂವರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಬೆಳಗಾವಿಯ ಅಬ್ಬಾಸ, ವಿಶ್ವನಾಥ, ರವೀಂದ್ರ ಎನ್ನುವವರು ಸಾವನ್ನಪ್ಪಿರುವುದಾಗಿ ಸತಾರಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸತ್ತ ಇನ್ನೂ ಕೆಲವರ ಹೆಸರು ಹಾಗೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಬಸ್ಸಿನಿಂದ ಹೊರತೆಗೆಯಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications