ಬಸ್ಗಾಗಿ ಪ್ರತಿಭಟಿಸಿ ವಾಪಸ್ ತೆರಳುವ ವೇಳೆ ಅಪಘಾತ: ವಿದ್ಯಾರ್ಥಿನಿ ಸಾವು
ಬೆಳಗಾವಿ, ಜನವರಿ 2: ಗ್ರಾಮಕ್ಕೆ ಬಸ್ ಸೇವೆ ಬೇಕೆಂದು ಆಗ್ರಹಿಸಿ ವಾಪಸ್ ಆಗುವ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಚಣಿಕೆ ಗ್ರಾಮದಲ್ಲಿ ನಡೆದಿದೆ.
ಕಿತ್ತೂರು ತಾಲೂಕಿನ ನಿಚ್ಛಣಕಿ ಗ್ರಾಮದ ಕಿತ್ತೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಕ್ಕವ್ವ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಶಾಲೆಗೆ ಹೋಗಲು ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಹಲವಾರು ದಿನಗಳಿಂದ ಅಕ್ಕವ್ವ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ್, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.
ಆದರೆ, ವಿದ್ಯಾರ್ಥಿಗಳ ಪ್ರತಿಭಟನೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಶಾಸಕ ಸ್ಪಂದಿಸುವ ಕೆಲಸ ಮಾಡಿರಲಿಲ್ಲ. ಆದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಮ್ಮ ಪ್ರಯತ್ನ ಮುಂದುವರಿಸಿದ್ದರು. ಹೊಸ ವರ್ಷದ ದಿನವೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯ ನಂತರ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಡೆದುಕೊಂಡು ಗ್ರಾಮಕ್ಕೆ ತೆರಳುತ್ತಿದ್ದಾಗ, ನಿಚ್ಚಣಕಿ ಗ್ರಾಮದ ಹತ್ತಿರ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 3 ಜನ ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಅಕ್ಕವ್ವ ಚಿಕಿತ್ಸೆ ಫಲಿಸದೇ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ವಿದ್ಯಾರ್ಥಿನಿಯ ಸಾವಿನ ಸುದ್ದಿ ತಿಳಿದು ಶಿವನೂರಿನ ಮಹಿಳೆಯರು, ಮಕ್ಕಳು, ಗ್ರಾಮಸ್ಥರು ಆಕ್ರೋಶಗೊಂಡು ರಾಜ್ಯ ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಸಾರಿಗೆ ಅಧಿಕಾರಿಗಳ ಮತ್ತು ಸರಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಿವನೂರು ಗ್ರಾಮಕ್ಕೆ ಶಾಲಾ ಕಾಲೇಜು ವಿದ್ಯಾರ್ಥಿಗಳು ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಹಲವಾರು ವರ್ಷಗಳಿಂದ ಎಲ್ಲರ ಗಮನಕ್ಕೆ ತಂದರೂ ಸಹ ಅಧಿಕಾರಿಗಳು ಬಸ್ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ನಡೆದುಕೊಂಡು ಗ್ರಾಮಕ್ಕೆ ಬರುತ್ತಿದ್ದೇವೆ. ನಿನ್ನೆ ನಡೆದುಕೊಂಡು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಘಟನೆಯ ಬಗ್ಗೆ ವಿದ್ಯಾರ್ಥಿಗಳು ವಿವರಿಸಿದ್ದಾರೆ.