ಬೆಳಗಾವಿ; ಖಾಸಗಿ ಬೋರ್‌ವೆಲ್ ಬಾಡಿಗೆಗೆ, ಟ್ಯಾಂಕರ್‌ ಮೂಲಕ ನೀರು ಪೂರೈಕೆ

ಬೆಳಗಾವಿ, ಜೂನ್ 22: "ಜಿಲ್ಲೆಯಲ್ಲಿ ಎಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿಗಳಲ್ಲಿ ಅನುದಾನ ಲಭ್ಯವಿದ್ದು, ಖಾಸಗಿ ಕೊಳವೆಬಾವಿಗಳು ಲಭ್ಯವಿದ್ದರೆ ಅವುಗಳನ್ನು ಕೂಡಲೇ ಬಾಡಿಗೆ ಪಡೆದುಕೊಳ್ಳಬೇಕು" ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ‌ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಹಲವು ಸೂಚನೆಗಳನ್ನು ನೀಡಿದರು.

Supply Drinking Water Through Tanker Belagavi DC Directed

"ಮಳೆಗಾಲ ವಿಳಂಬವಾಗುತ್ತಿದೆ. ಜಿಲ್ಲೆಯ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುತ್ತದೆ. ಆದ್ದರಿಂದ ಎಲ್ಲ ತಹಶೀಲ್ದಾರರು ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗತ್ಯವಿರುವ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು" ಎಂದರು.

ಹೆಚ್ಚುವರಿ ಅನುದಾನ; ಜಿಲ್ಲಾಧಿಕಾರಿ ನಿತೇಶ್ ಪಾಟೀಲ, "ಟಾಸ್ಕ್‌ಫೋರ್ಸ್‌ ಸಭೆಯನ್ನು ನಡೆಸಿ ಆಯಾ ತಾಲ್ಲೂಕು ಅಥವಾ ಮತಕ್ಷೇತ್ರದಲ್ಲಿ ಇರುವ ಸಮಸ್ಯೆಯನ್ನು ಕೂಲಂಕಷವಾಗಿ ಪರಿಶೀಲಿಸಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು. ಇದರ ಆಧಾರದ ಮೇಲೆ ಹೆಚ್ಚುವರಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು" ಎಂದು ಹೇಳಿದರು.

"ಲಭ್ಯವಿರುವ ಅನುದಾನದಲ್ಲಿ ಶಾಸಕರ ಸಲಹೆಯ ಪ್ರಕಾರ ಕಾಮಗಾರಿ ಆರಂಭಿಸಬೇಕು. ಜನರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುರ್ತು ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿರುತ್ತದೆ. ಪ್ರತಿ ತಾಲ್ಲೂಕಿಗೆ ಇನ್ನೂ ಹೆಚ್ಚಿನ ಅನುದಾನ ಹೊಂದಾಣಿಕೆ ಮೂಲಕ ಕೂಡ ಲಭಿಸಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬಹುದು" ಎಂದು ತಿಳಿಸಿದರು.

"ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತುಕೊಂಡು ಕೂಡಲೇ ಸ್ಪಂದಿಸಬೇಕು" ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

"ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಹಾಗೂ ತುರ್ತು ಕಾಮಗಾರಿ ಆರಂಭಿಸಲು ಅನುದಾನ ಲಭ್ಯವಿದ್ದು, ಈ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಬೇಕು. ಖಾಸಗಿ ಕೊಳವೆಬಾವಿಗಳು ಲಭ್ಯವಿದ್ದರೆ ಅವುಗಳನ್ನು ಕೂಡಲೇ ಬಾಡಿಗೆ ಪಡೆದುಕೊಳ್ಳಬೇಕು" ಎಂದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, "ಅಥಣಿ ತಾಲ್ಲೂಕಿನ 7 ಗ್ರಾಮ ಪಂಚಾಯತಿ ಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 40 ಕಡೆ ಕೊಳವೆಬಾವಿಗಳ ಮೂಲಕ ನೀರು ಒದಗಿಸಲು ಕ್ರಮ‌ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ನಾಲ್ಕೈದು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ" ಎಂದರು.

"ಕೊಳವೆಬಾವಿ ಕೊರೆಯಲು ಯಾವುದೇ ರೀತಿಯ ದುಡ್ಡಿನ ಕೊರತೆ ಇರುವುದಿಲ್ಲ. ಆದ್ದರಿಂದ ಎಲ್ಲಿ ಸಾಧ್ಯವೋ ಅಲ್ಲಿ ತೆರೆದ ಬಾವಿ ಹಾಗೂ ಕೊಳವೆ ಬಾವಿ ನಿರ್ಮಿಸಲು ಪ್ರಸ್ತಾವನೆಗಳನ್ನು ಕೂಡ ಪಡೆಯಲಾಗುತ್ತಿದೆ" ಎಂದು ಹೇಳಿದರು.

ಕೆಲವು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, "ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದಷ್ಟು ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬಗೊಳ್ಳಬಾರದು. ಅಧಿಕಾರಿಗಳು ನಿರಂತರ ನಿಗಾವಹಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಬೆಳಗಾವಿ ನಗರದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಪ್ರಮುಖ ವಿಷಯಗಳ ಕುರಿತು ಪ್ರತ್ಯೇಕವಾಗಿ ಸಭೆ ನಡೆಸಿ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+