"ಮೇಕೆದಾಟು ಅಣೆಕಟ್ಟು ನಿರ್ಮಾಣ; ಸುಪ್ರೀಂ ಆದೇಶಕ್ಕೆ ಯಾವುದೇ ಧಕ್ಕೆ ಇಲ್ಲ"
ರಾಮನಗರ, ಸೆಪ್ಟೆಂಬರ್ 14: ಮೇಕೆದಾಟು ಬಳಿ ಉದ್ದೇಶಿತ ಅಣೆಕಟ್ಟು ನಿರ್ಮಾಣದಿಂದ ಕಾವೇರಿ ನದಿ ನೀರಿನ ಕುರಿತ ಸುಪ್ರೀಂ ಕೋರ್ಟ್ ಆದೇಶಗಳಿಗೆ ಕಿಂಚಿತ್ತೂ ಧಕ್ಕೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಉದ್ದೇಶಿತ ಅಣೆಕಟ್ಟು ನಿರ್ಮಾಣದ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದ ಅವರು, ನಾಳೆ ದೆಹಲಿ ಪ್ರವಾಸ ಹಮ್ಮಿಕೊಂಡಿದ್ದು, ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಮತ್ತು ಕೇಂದ್ರ ಪರಿಸರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವ ಕಾರಣಕ್ಕೆ ಇಂದು ಸ್ಥಳ ಪರಿಶೀಲನೆ ಮಾಡಿರುವುದಾಗಿ ತಿಳಿಸಿದರು.
ಅನುಮೋದನೆ ನಂತರ ಮೇಕೆದಾಟು ಅಣೆಕಟ್ಟು ನಿರ್ಮಾಣ; ರಮೇಶ್ ಜಾರಕಿಹೊಳಿ
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಯಾವುದೇ ಅಡೆತಡೆಗಳಿಲ್ಲ, ನ್ಯಾಯಾಲಯದಲ್ಲಿ ತಮಿಳುನಾಡಿನ ಒಂದು ಅರ್ಜಿ ಇದ್ದು, ನಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಸೂಕ್ತ ವಿವರಣೆ ನೀಡಲಿದ್ದೇವೆ. ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸಿ ತಮಿಳುನಾಡಿನ ಪಾಲಿನ ನೀರಿನಲ್ಲಿ ಯಾವುದೇ ವ್ಯತ್ಯಾಸ ವಾಗುವುದಿಲ್ಲ ಎಂಬುದನ್ನು ಮನವರಿಕೆ ಮಾಡುಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಳೆದ ಮೈತ್ರಿ ಸರ್ಕಾರದ ಅವಧಿಯಲ್ಲೇ ಕೇಂದ್ರ ಸರ್ಕಾರಕ್ಕೆ ಮೇಕೆದಾಟು ಅಣೆಕಟ್ಟು ಯೋಜನೆಯ ಡಿಪಿಆರ್ ಸಲ್ಲಿಸಲಾಗಿತ್ತು. ಮತ್ತೊಮ್ಮೆ ಪರಿಷ್ಕೃತ ಸುಮಾರು 9 ಸಾವಿರ ಕೋಟಿಯ ವೆಚ್ಚದ ಡಿಪಿಆರ್ ಸಲ್ಲಿಸಲಾಗಿದೆ. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.
ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆ ಇದೆ. ಹೀಗಾಗಿ ನೆರೆಯ ರಾಜ್ಯದಿಂದ ಸಹಜವಾಗಿಯೇ ಇದಕ್ಕೆ ಅಡೆತಡೆ ಹೆಚ್ಚಿದೆ. ಅಗತ್ಯ ಬಿದ್ದರೆ ತಮಿಳುನಾಡು ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು ಎಂದರು.