Almatti Dam: ಆಲಮಟ್ಟಿಯಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಬೆಳಗಾವಿ, ಜುಲೈ 24: ಆಲಮಟ್ಟಿ ಡ್ಯಾಂನಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಆಲಮಟ್ಟಿ ಡ್ಯಾಂ ಪೂರ್ಣ ಮಟ್ಟ 1704.81 ಅಡಿಗಳು, ಬುಧವಾರದ ನೀರಿನ ಮಟ್ಟ 1698.08 ಅಡಿಗಳು.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬುಧವಾರ ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

"ನಮ್ಮ ಜಿಲ್ಲೆಯ ನದಿಗಳಿಂದ ಆಲಮಟ್ಟಿ ಜಲಾಶಯಕ್ಕೆ 1.80 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಆಲಮಟ್ಟಿಯಿಂದ ಇಂದಿನಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಗೊಳಿಸಲಿದ್ದಾರೆ. ಘಟಪ್ರಭಾ ಜಲಾಶಯದಲ್ಲಿ ಸದ್ಯದ ಶೇ.80 ರಷ್ಟು ಸಂಗ್ರಹಮಟ್ಟವನ್ನು ಆಧರಿಸಿ ಇಂದಿನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯ ಕುರಿತು ನಿರ್ಧರಿಸಲಾಗುವುದು" ಎಂದರು.
"ನೀರು ಬಿಡುಗಡೆಯ ಕುರಿತು ಎಲ್ಲಾ ತಹಶೀಲ್ದಾರರು ಹಾಗೂ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಗುವುದು. ಜಿಲ್ಲೆಯಾದ್ಯಂತ ಅನೇಕ ತಳಮಟ್ಟದ ಸೇತುವೆಗಳು ಮುಳುಗಡೆಯಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ಬಹುತೇಕ ಕಡೆಗಳಲ್ಲಿ ಪರ್ಯಾಯ ರಸ್ತೆಗಳಿವೆ. ಆದಾಗ್ಯೂ ಪ್ರತಿಯೊಂದು ಸೇತುವೆಗಳ ಕಡೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು" ಎಂದು ನಿರ್ದೇಶನ ನೀಡಿದರು.
ಸದ್ಯದ ಮಾಹಿತಿಯಂತೆ ಆಲಮಟ್ಟಿ ಜಲಾಶಯಕ್ಕೆ 1,59,812 ಕ್ಯುಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಆದರೆ ಒಳಹರಿವಿನ ಪ್ರಮಾಣ ಏರಿಕೆಯಾಗುವ ಹಿನ್ನಲೆಯಲ್ಲಿ ನದಿಗೆ ಹರಿಸುವ ನೀರಿನ ಪ್ರಮಾಣವನ್ನು 2 ಲಕ್ಷ ಕ್ಯುಸೆಕ್ಗೆ ಏರಿಕೆ ಮಾಡಲಾಗುತ್ತದೆ.
ಆಲಮಟ್ಟಿ ಡ್ಯಾಂ ಅನ್ನು ಕೃಷ್ಣ ನದಿಗೆ ಕಟ್ಟಲಾಗಿದೆ. ಇದು ಉತ್ತರ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾಗಿದೆ. ವಿದ್ಯುತ್ ಉತ್ಪಾದನೆ, ನೀರಾವರಿಗೆ ಈ ಡ್ಯಾಂ ಪ್ರಮುಖ ಆಧಾರವಾಗಿದೆ. ಜುಲೈ 2005ರಲ್ಲಿ ಈ ಡ್ಯಾಂ ನಿರ್ಮಾಣ ಕೊನೆಗೊಂಡಿತು. ಅಣೆಕಟ್ಟು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಅಂಚಿನಲ್ಲಿದೆ.
ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿವಿಧ ಕಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಘಟಪ್ರಭಾ ನದಿಯ ಸೇತುವೆ ಬಳಿ ನದಿಯ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.
ಬೆಳಗಾವಿ ಜಿಲ್ಲಾಧಿಕಾರಿಗಳು ನದಿತೀರದ ಗ್ರಾಮಗಳ ಕುರಿತು ತಹಶೀಲ್ದಾರ್ರಿಂದ ಮಾಹಿತಿ ಪಡೆದುಕೊಂಡರು. ಪ್ರವಾಹ ಬಾಧಿತಗೊಳ್ಳಲಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರ್, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಪ್ರವಾಹ ಪರಿಸ್ಥಿತಿ ಉಂಟಾದರೆ ಬೋಟ್ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು. ಅಗತ್ಯಬಿದ್ದರೆ ಬಾಡಿಗೆ ಬೋಟ್ ಪಡೆಯಲು ಕ್ರಮ ಕೈಗೊಳ್ಳಬೇಕು. 6 ಬೋಟ್ ಖರೀದಿಸಿ ಅವುಗಳ ಬಳಕೆಯ ಕುರಿತು ಅಗ್ನಿಶಾಮಕ ದಳದ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸರ್ಚ್ ಲೈಟ್ ಕೂಡ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.












Click it and Unblock the Notifications