ಬೆಳಗಾವಿಗೆ ಇಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇಮಕ?
ಬೆಳಗಾವಿ, ಜೂನ್ 29: ಬೆಳಗಾವಿಯಂತಹ ದೊಡ್ಡ ಜಿಲ್ಲೆಗಳ ಆಡಳಿತ ಸಮಪರ್ಕವಾಗಿ ನಡೆಸಲು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗಕ್ಕೆ ಸಲಹೆ ನೀಡಲಾಗಿದೆ.
ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್. ವಿ. ದೇಶಪಾಂಡೆ ಅಧ್ಯಕ್ಷತೆಯಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಆರ್. ವಿ. ದೇಶಪಾಂಡೆ, "ನಾಗರಿಕರಿಗೆ ಉತ್ತಮ ಸೌಲಭ್ಯ ಹಾಗೂ ಸರಕಾರಿ ಯೋಜನೆಗಳ ಪ್ರಯೋಜನ ದೊರಕಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯವಾಗಿದೆ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ ಪಾರದರ್ಶಕತೆ ಕೊರತೆ ಎದ್ದು ಕಾಣುತ್ತಿದ್ದು, ಇದನ್ನು ನಿವಾರಿಸಬೇಕಿದೆ" ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇಮಕ: ಈ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇಬ್ಬರು ಅಪರ ಜಿಲ್ಲಾಧಿಕಾರಿಗಳನ್ನು ನೇಮಿಸಲು ಸಲಹೆಯನ್ನು ನೀಡಿದರು.
"ಪೊಲೀಸ್ ಇಲಾಖೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಲಾಗಿದೆ. ಅದೇ ಮಾದರಿಯಲ್ಲಿ ಬೆಳಗಾವಿಯಂತಹ ದೊಡ್ಡ ಜಿಲ್ಲೆಗಳಿಗೆ ಇಬ್ಬರು ಅಪರ ಜಿಲ್ಲಾಧಿಕಾರಿಗಳನ್ನು ನೇಮಿಸುವುದರಿಂದ ಆಡಳಿತದಲ್ಲಿ ಇನ್ನಷ್ಟು ಸುಧಾರಣೆ ಸಾಧ್ಯವಾಗಲಿದೆ" ಎಂದರು.
"4 ತಾಲ್ಲೂಕುಗಳು ಹೊಸದಾಗಿ ರಚಿಸಲಾಗಿದೆ. ರೆಕಾರ್ಡ್ ರೂಂ ಇಲ್ಲದಿರುವುದರಿಂದ ಕಂದಾಯ ಇಲಾಖೆಯ ಪ್ರಮುಖ ದಾಖಲೆಗಳ ಸಂರಕ್ಷಣೆಗೆ ತೊಂದರೆಯಾಗುತ್ತಿದೆ. ರಸ್ತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ವತಿಯಿಂದ ನಿರಾಕ್ಷೇಪಣೆ ಪ್ರಮಾಣಪತ್ರ ಕಾಲಮಿತಿಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅನೇಕ ಕಾಮಗಾರಿಗಳು ಮತ್ತು ಯೋಜನೆಗಳು ನೆನೆಗುದಿಗೆ ಬಿದ್ದಿದ್ದು, ಕೆಲ ಯೋಜನೆಗಳು ರದ್ದಾಗಿರುತ್ತವೆ. ಆದ್ದರಿಂದ ಸಣ್ಣಪುಟ್ಟ ಕಾಮಗಾರಿಗಳಿಗೆ ರಾಜ್ಯಮಟ್ಟದಲ್ಲಿ ತ್ವರಿತ ಅನುಮತಿ ನೀಡಬಹುದು" ಎಂದು ತಿಳಿಸಿದರು.
ನಿತೇಶ್ ಪಾಟೀಲ ಸಭೆಯಲ್ಲಿ, ಕಂದಾಯ ಇಲಾಖೆಯಲ್ಲಿ ಅಗತ್ಯವಿರುವ ಆಡಳಿತ ಸುಧಾರಣೆಗಳ ಕುರಿತು ವಿವರಿಸಿದರು. ಗ್ರಾಮ ಪಂಚಾಯಿತಿ ಕಟ್ಟಡಗಳನ್ನೇ ಗ್ರಾಮಸೌಧ ಎಂದು ಪರಿವರ್ತಿಸಿ ಪಂಚಾಯತಿ ವ್ಯಾಪ್ತಿಯ ಮೂರ್ನಾಲ್ಕು ಗ್ರಾಮಗಳ ಜನರಿಗೆ ಪ್ರತಿಯೊಂದು ಸೇವೆಯು ಗ್ರಾಮಸೌಧದಲ್ಲೇ ದೊರಕುವಂತೆ ಕ್ರಮ ಕೈಗೊಳ್ಳಬೇಕಿದೆ.
ಗ್ರಾಮ ಪಂಚಾಯತಿಯ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ಗ್ರಾಮಸೌಧದಲ್ಲೇ ಕುಳಿತು ಸಾರ್ವಜನಿಕರ ಕೆಲಸ ಮಾಡಿಕೊಡಲು ಅನುಕೂಲ ಕಲ್ಪಿಸಬಹುದು. ಗ್ರಾಮ ಲೆಕ್ಕಾಧಿಕಾರಿಗಳಿಂದ ಹಿಡಿದು ಜಿಲ್ಲಾಧಿಕಾರಿ ಹಂತದವರೆಗೆ ಸಿಯುಜಿ ಮೊಬೈಲ್ ಸಂಖ್ಯೆ ನೀಡುವುದರಿಂದ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವ ಅಕ್ರಮಗಳ ಪರಿಶೀಲನೆಗೆ ನರೇಗಾ ಓಂಬುಡ್ಸಮನ್ ಮಾದರಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪ್ರತ್ಯೇಕ ವಿಚಕ್ಷಣಾ ವ್ಯವಸ್ಥೆ ಸ್ಥಾಪಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸಲಹೆ ಕೊಟ್ಟರು.
ಬೆಳಗಾವಿ ಜಿಲ್ಲೆಯಲ್ಲಿ ನಾಗರಿಕರು ಮತ್ತು ಪೊಲೀಸರ ನಡುವಿನ ಅನುಪಾತವು ತೀರ ಕಡಿಮೆಯಾಗಿದೆ. ಪ್ರತಿ ಲಕ್ಷ ಜನರಿಗೆ ಕೇವಲ 52 ಜನ ಪೊಲೀಸರಿದ್ದಾರೆ ಇದರಿಂದ ನಿರ್ವಹಣೆ ಕಷ್ಟದಾಯಕವಾಗಿದೆ. ಆದ್ದರಿಂದ ಕನಿಷ್ಠ ಸರಕಾರ ನಿಗದಿಪಡಿಸಿದ ಅನುಪಾತದಂತೆ ಸಿಬ್ಬಂದಿ ನೇಮಿಸುವುದು ಸೂಕ್ತ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸಲಹೆ ನೀಡಿದರು.
ಸಭೆಯಲ್ಲಿ ಜನರು ಹಿರಿಯ ನಾಗರಿಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳ ಆದೇಶಗಳನ್ನು ಜಾರಿಗೊಳಿಸಲು ಸಿವಿಲ್ ನ್ಯಾಯಾಲಯಗಳ ಮಾದರಿಯಲ್ಲಿ ಬೇಲಿಫ್ ಗಳನ್ನು ನೇಮಿಸಬೇಕು ಎಂದು ಸಲಹೆ ನೀಡಿದರು.
ಕೆಲವು ಇಲಾಖೆಗಳಲ್ಲಿ ನಿವೃತ್ತ ನೌಕರರಿಗೆ ಆರು ತಿಂಗಳಾದರೂ ಪಿಂಚಣಿ ಮತ್ತಿತರ ಸೌಲಭ್ಯಗಳು ದೊರಕುತ್ತಿಲ್ಲ. ಇದರಿಂದ ಅನೇಕ ಕುಟುಂಬಗಳು ಸಂಕಷ್ಟಕೀಡಾಗಿವೆ. ಆದ್ದರಿಂದ ನಿವೃತ್ತಿ ಮುಂಚೆಯೇ ಪಿಂಚಣಿ ದಾಖಲೆಗಳನ್ನು ಸಲ್ಲಿಸಿ ಸಕಾಲದಲ್ಲಿ ಪಿಂಚಣಿ ದೊರಕಿಸುವ ನಿಯಮ ಜಾರಿಗೆ ತರಬೇಕು ಎಂದು ಸಲಹೆ ನೀಡಲಾಯಿತು.












Click it and Unblock the Notifications