'ವೀರಜ್ಯೋತಿ'ಗೆ ಸ್ವಾಗತ; 2020ರ ಕಿತ್ತೂರು ಉತ್ಸವಕ್ಕೆ ಚಾಲನೆ
ಬೆಳಗಾವಿ, ಅಕ್ಟೋಬರ್ 23: 'ವೀರಜ್ಯೋತಿ'ಯನ್ನು ಸ್ವಾಗತಿಸುವ ಮೂಲಕ ಕಿತ್ತೂರು ಉತ್ಸವ-2020ಕ್ಕೆ ಚಾಲನೆ ನೀಡಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿಯ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಗಳನ್ನು ರದ್ದುಗೊಳಿಸಲಾಗಿದೆ.
ಶುಕ್ರವಾರ ಬೆಳಗಾವಿ ಜಿಲ್ಲೆಯ ಕಿತ್ತೂರಿನ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ವೀರಜ್ಯೋತಿಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಜ್ಯೋತಿ ಹೊತ್ತು ಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು.
ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಶುಕ್ರವಾರ ಬೆಳಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ನಡುವೆ ಬರಮಾಡಿಕೊಂಡರು. ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ, ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು.
ಜ್ಯೋತಿ ಬರಮಾಡಿಕೊಳ್ಳುವ ಮುನ್ನ ಚನ್ನಮ್ಮ ವೃತ್ತದಲ್ಲಿ ಇರುವ ಕಿತ್ತೂರು ಚನ್ನಮ್ಮ ಪುತ್ಥಳಿಗೆ ಗಣ್ಯರು ಹಾಗೂ ಜನಪ್ರತಿನಿಧಿಗಳು ಮಾಲಾರ್ಪಣೆ ಮಾಡಿದರು. ಪ್ರತಿ ವರ್ಷ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ಆಚರಿಸಲಾಗುತ್ತಿತ್ತು. ಈ ಬಾರಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.
ಅಕ್ಟೋಬರ್ 22ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಯಂತೆ ಬೆಳಗಾವಿಯಲ್ಲಿ 61 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 24,229.

ಕಿತ್ತೂರು ಉತ್ಸವಕ್ಕೆ ಧ್ವಜಾರೋಹಣ
ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ನಿಚ್ಚಣಿಕೆಯ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಠದ ಸ್ವಾಮೀಜಿ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿದರು.

ವೀರಜ್ಯೋತಿಯ ಮೆರವಣಿಗೆ
ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಶುಕ್ರವಾರ ವೀರ ಜ್ಯೋತಿ ಚನ್ನಮ್ಮ ವೃತ್ತದಲ್ಲಿ ಸ್ವಾಗತಿಸಲಾಯಿತು. ಬಳಿಕ ಆರಂಭಗೊಂಡ ವೀರಜ್ಯೋತಿ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಿಚ್ಚಣಿಕಿ ಶ್ರೀ ಮಡಿವಾಳೇಶ್ವರ ಮಠದವರೆಗೆ ತೆರಳಿತು.

ಸರಳವಾಗಿ ಆಚರಣೆ
ಪ್ರತಿ ವರ್ಷ ಮೂರು ದಿನಗಳ ಕಾಲ ಕಿತ್ತೂರು ಉತ್ಸವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸ್ಥಳೀಯ ಜನರ ಜೊತೆ ಚರ್ಚಿಸಿ ಸರಳ ಮತ್ತು ಸಾಂಕೇತಿಕವಾಗಿ ಕಿತ್ತೂರು ಉತ್ಸವ ಆಚರಿಸಲಾಯಿತು.

ಕಾರ್ಯಕ್ರಮಗಳು ರದ್ದು
ಪ್ರತಿ ವರ್ಷ ಮೂರು ದಿನಗಳ ಕಿತ್ತೂರು ಉತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗನ್ನು ಆಯೋಜನೆ ಮಾಡಲಾಗುತ್ತಿತ್ತು. ಈ ಬಾರಿ ಕೋವಿಡ್ ಕಾರಣದಿಂದಾಗಿ ಕುಸ್ತಿಹಬ್ಬ, ಕ್ರೀಡಾ ಸ್ಪರ್ಧೆ, ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರದ್ದು ಮಾಡಲಾಗಿದೆ.












Click it and Unblock the Notifications