ಆರ್ಥಿಕ ಸಂಕಷ್ಟದಲ್ಲಿದ್ದರೂ ದುಂದುವೆಚ್ಚಕ್ಕೆ ಕೈ ಹಾಕಿದ ವಿಟಿಯು!
ಬೆಳಗಾವಿ, ಜೂನ್.28: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 20ನೇ ಸಂಸ್ಥಾಪನಾ ದಿನಾಚರಣೆಗೆ ಒಂದೂವರೆ ಕೋಟಿ ವೆಚ್ಚದಲ್ಲಿ ಸಿದ್ಧತೆ ನಡೆಸಿದೆ.
ಜೂನ್.29ರಂದು ನಾಳೆ 11:30 ಕ್ಕೆ ಡಾ.ಎಪಿಜೆ ಅಬ್ದುಲ್ ಕಲಾಂ ಪ್ರೇಕ್ಷಾಗೃಹ, ಜ್ಞಾನಸಂಗಮದಲ್ಲಿ ಸಂಸ್ಥಾಪನಾ ದಿನಾಚರಣೆ ನಡೆಯಲಿದ್ದು, ವಿಶ್ವವಿದ್ಯಾಲಯ ಆರ್ಥಿಕ ಸಂಕಷ್ಟದಲ್ಲಿದ್ದರೂ ದುಂದುವೆಚ್ಚಕ್ಕೆ ಕೈ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.
ಕೆಂಪೇಗೌಡ ಹೆಸರಿನಲ್ಲಿ ವಿಶ್ವವಿದ್ಯಾನಿಲಯ: ಸಿಎಂ ಕುಮಾರಸ್ವಾಮಿ
ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ 300 ಜನರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಹಿಂದಿನ ಕುಲಪತಿ ಮಹೇಶಪ್ಪ ಹೊರತುಪಡಿಸಿ ಕುಲಸಚಿವರು, ಹಣಕಾಸು ಅಧಿಕಾರಿಗಳು, ವಿಶೇಷಾಧಿಕಾರಿಗಳು, ಅತಿಥಿ ಉಪನ್ಯಾಸಕರಿಗೆ ಸನ್ಮಾನ ಮಾಡಲಾಗುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ವಜುಭಾಯ್ ವಾಲಾ ವಹಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಗೌರವಾನ್ವಿತ ಅತಿಥಿಗಳಾಗಿ ಸಚಿವರಾದ ಜಿ.ಟಿ.ದೇವೇಗೌಡ, ರಮೇಶ ಜಾರಕಿಹೊಳಿ ಆಗಮಿಸುವರು.
ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮಂಚೂಣಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 21ನೇ ಶತಮಾನದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ತಾಂತ್ರಿಕ ಶಿಕ್ಷಣ ಹಾಗೂ ಸಂಶೋಧನೆಗೆ ಹೊಸ ಆಯಾಮ ಕಲ್ಪಿಸಲು ಕಳೆದ ಮೂರು ವರ್ಷಗಳಲ್ಲಿ ಹಲವಾರು ನೈಪುಣ್ಯತೆಯುಳ್ಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 1998 ರಲ್ಲಿ ಸ್ಥಾಪನೆಯಾಯಿತು. ಸರ್.ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾಲದ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯದ ಸುಮಾರು 200ಕ್ಕೂ ಹೆಚ್ಚು ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಬರುತ್ತವೆ.