ಬೆಳಗಾವಿಯಲ್ಲಿ ಬಿರುಸು ಪಡೆದ ಮಳೆ; ಜಲಾಶಯಗಳ ನೀರಿನ ಮಟ್ಟ ಏರಿಕೆ
ಬೆಳಗಾವಿ, ಆಗಸ್ಟ್ 05: ಬೆಳಗಾವಿ ನಗರವೂ ಸೇರಿ ಜಿಲ್ಲೆಯ ಹಲವೆಡೆ ಬುಧವಾರ ಉತ್ತಮ ಮಳೆ ಸುರಿದಿದೆ. ಬೆಳಗಾವಿಯಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಆಗಾಗ ಸುರಿಯುತ್ತಿದ್ದ ಜಿಟಿಜಿಟಿ ಮಳೆ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆಯಿತು. 12 ತಾಸಿಗಿಂತ ಹೆಚ್ಚು ಸುರಿದ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾಗಿದೆ. ರಾಯಬಾಗ, ಬೈಲಹೊಂಗಲ ತಾಲೂಕಿನಲ್ಲೂ ಸಾಧಾರಣ ಮಳೆಯಾದರೆ, ಸವದತ್ತಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯಿತು. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಸೋಮವಾರ 8,938 ಕ್ಯೂಸೆಕ್ ಒಳಹರಿವು ಇದ್ದರೆ, ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ 2,204 ಕ್ಯೂಸೆಕ್ ಒಳಹರಿವಿದೆ.
ಘಟಪ್ರಭಾ ಒಳಹರಿವು ಹೆಚ್ಚಳ: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಎಂ.ಕೆ.ಹುಬ್ಬಳ್ಳಿ ಬಳಿ ಇರುವ ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಳೆಯು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ ನದಿ ನೀರಿಲ್ಲದೆ ಸಂಪೂರ್ಣ ಬತ್ತಿ ಹೋಗಿತ್ತು.

ಆದರೆ, ಈ ವರ್ಷ ಜೂನ್ ಆರಂಭದಲ್ಲೇ ಉತ್ತಮ ಮಳೆ ಸುರಿಯುತ್ತಿದ್ದರಿಂದ ಮಲಪ್ರಭಾ ನದಿಯ ಮಧ್ಯೆ ಇರುವ ಶರಣೆ ಗಂಗಾಂಬಿಕಾ ಐಕ್ಯ ಮಂಟಪ ಆಕರ್ಷಣೆಯಿಂದ ಗೋಚರಿಸುತ್ತಿದೆ. ಈಗಾಗಲೇ ರೈತರು ಬಿತ್ತನೆ ಕಾರ್ಯ ಮುಗಿಸಿದ್ದಾರೆ.












Click it and Unblock the Notifications