ಡಿಸಿಸಿ ಬ್ಯಾಂಕ್ ಚುನಾವಣೆ: 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆಗೆ ಪ್ರಯತ್ನ
ಬೆಳಗಾವಿ, ಅಕ್ಟೋಬರ್ 29: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಇತಿಹಾಸದಲ್ಲಿ ಮೊದಲ ಬಾರಿಗೆ 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆ ನಡೆಸಲು ಪ್ರಯತ್ನಿಸಲಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಎಲ್ಲಾ ಕಮಲ ನಾಯಕರು ಸೇರಿ ಗುರುವಾರ ಸುದ್ದಿಗೋಷ್ಠಿ ನಡೆಸಿದರು. ಕರ್ನಾಟಕದಲ್ಲಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನಲ್ಲಿ ಬೆಳಗಾವಿ ಬ್ಯಾಂಕ್ ಮೊದಲ ಸ್ಥಾನದಲ್ಲಿದೆ. ಇಲ್ಲಿ ಪ್ರತಿ ಐದು ವರ್ಷ ಚುನಾವಣೆ ನಡೆಯುತ್ತದೆ. ರೈತರ ಏಳಿಗೆಗಾಗಿ ಶ್ರಮಿಸುವ ಬ್ಯಾಂಕ್ ನಲ್ಲಿ ಅವಿರೋಧ ಆಯ್ಕೆಯಾಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸೇರಿದಂತೆ ಪರಿವಾರದವರು ಸೂಚನೆ ನೀಡಿದ್ದರು. ನಮ್ಮಲ್ಲಿರುವ ಭಿನ್ನಾಭಿಪ್ರಾಯ ಬದಿಗಿಟ್ಟು, ಒಂದಾಗಿ ಹೋಗುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಸೂಚಿಸಿದಂತೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆಯಾಗಬೇಕೆಂದು ತೀರ್ಮಾನಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.
ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಪ್ರತಿಷ್ಠಿತರ ಗದ್ದುಗೆ ಗುದ್ದಾಟ
ಈಗಾಗಲೇ ಏಳು ತಾಲೂಕಿನ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಸಲ್ಲಿಕೆಯಾಗಿವೆ. ಇನ್ನೂ ನಾಲ್ಕು ಕ್ಷೇತ್ರದಲ್ಲಿ ಎರಡು ಮೂರು ನಾಮಪತ್ರ ಸಲ್ಲಿಕೆಯಾಗಿವೆ. ಖಾನಾಪುರ, ರಾಮದುರ್ಗ, ಬೈಲಹೊಂಗಲ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿರುವುದರಿಂದ ಆ ಅಭ್ಯರ್ಥಿಯ ಮನವೊಲಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್ ಉಪ ಸಭಾಪತಿ ಆನಂದ ಮಾಮನಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಉಮೇಶ ಕತ್ತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ರಮೇಶ ಕತ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದೇ ನವೆಂಬರ್ 6 ರಂದು ಬೆಳಗಾವಿ ಕೇಂದ್ರ ಸಹಕಾರಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.