ಮುಂದಿನ ದಿನಗಳಲ್ಲಿ ಕಿತ್ತೂರು ಅಭಿವೃದ್ಧಿಗೆ ಆದ್ಯತೆ: ಸಚಿವ ಜಾರಕಿಹೊಳಿ
ಬೆಳಗಾವಿ, ಅಕ್ಟೋಬರ್ 23: ಕೋಟೆ ಸೇರಿದಂತೆ ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಕಿತ್ತೂರು ಅಭಿವೃದ್ಧಿಗೆ ಸರಕಾರ ಮುಂದಿನ ದಿನಗಳಲ್ಲಿ ವಿಶೇಷ ಆದ್ಯತೆ ನೀಡಲಿದೆ. ಕಳೆದ ಮೂರು ವರ್ಷಗಳಲ್ಲಿ ಬರಗಾಲ ಎದುರಾಗಿತ್ತು. ಆದ್ದರಿಂದ ಕಿತ್ತೂರು ಅಭಿವೃದ್ಧಿ ಕಡೆಗೆ ಒತ್ತು ನೀಡಿರಲಿಲ್ಲ. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಕಿತ್ತೂರು ಉತ್ಸವದ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಸ್ಥಳೀಯ ಜನಪ್ರತಿನಿಧಿಗಳ ಜತೆಗೂಡಿ ಕಿತ್ತೂರಿನ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದರು. ಕಿತ್ತೂರಿನಲ್ಲಿ ವಿಜಯೋತ್ಸವ ಜ್ಯೋತಿ ಸ್ವಾಗತಿಸಿದ ಸಚಿವರು, ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಜಾನಪದ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.

ಸಚಿವರಿಗೆ ಶಾಸಕ ಡಿ.ಬಿ.ಇನಾಮದಾರ್, ಡಿಸಿ ಜಿಯಾವುಲ್ಲಾ ಸೇರಿ ಗಣ್ಯರು ಸಾಥ್ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ಸರಕಾರದಿಂದ ಅದ್ಧೂರಿಯಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ. ಉತ್ಸವವು ವರ್ಷದಿಂದ ವರ್ಷಕ್ಕೆ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಯಣ್ಣ ಪ್ರಾಧಿಕಾರದಂತೆ ಕಿತ್ತೂರು ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಕೇಳಲಾಗಿದೆ ಎಂದರು.
ಕಿತ್ತೂರು ಉತ್ಸವ ಉದ್ಘಾಟಿಸಬೇಕಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಗೈರುಹಾಜರಾದರು. ಕಿತ್ತೂರು ರಾಜಗುರು ಸಂಸ್ಥಾನಮಠದ ಮಡಿವಾಳ ರಾಜಯೋಗಿಂದ್ರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.
ಸಮಾರಂಭದಲ್ಲಿ ಸರಕಾರದ ಮುಖ್ಯಸಚೇತಕ ಅಶೋಕ ಪಟ್ಟಣ, ಶಾಸಕರಾದ ಡಿ.ಬಿ.ಇನಾಮದಾರ್, ಗಣೇಶ ಹುಕ್ಕೇರಿ, ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಭಾಗಿಯಾಗಿದ್ದರು.












Click it and Unblock the Notifications