ನಿರುದ್ಯೋಗಿ ಯುವಕರಿಗಾಗಿ ಐರಾವತ ಯೋಜನೆ : ಪ್ರಿಯಾಂಕ್ ಖರ್ಗೆ
ಬೆಳಗಾವಿ, ಡಿಸೆಂಬರ್ 14 : 'ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ನೀಡಲಾಗುವ ಸಾಲ ಸೌಲಭ್ಯ ಯೋಜನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಐರಾವತ ಯೋಜನೆಯನ್ನು ಜಾರಿಗೆ ತರಲಾಗಿದೆ' ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶುಕ್ರವಾರ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಶಾಸಕ ಆರ್. ಅಶೋಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಕಾರು ಖರೀದಿಸಲು ಸಾಲ ಸೌಲಭ್ಯ ಯೋಜನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಪ್ರಸಕ್ತ ಸಾಲಿನಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಐರಾವತ ಯೋಜನೆಯನ್ನು ಜಾರಿಗೆ ತರಲಾಗಿದೆ' ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ 'ಐರಾವತ' ಟ್ಯಾಕ್ಸಿ ಯೋಜನೆ
'ಜನಸಂಖ್ಯೆಗೆ ಅನುಗುಣವಾಗಿ ಹಾಗೂ ಅನುದಾನದ ಲಭ್ಯತೆ ಆಧಾರದ ಮೇಲೆ ಫಲಾನುಭವಿಗಳ ಗುರಿ ನಿಗದಿಗೊಳಿಸಲಾಗುವುದು. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಗದಿತ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ' ಎಂದು ಸಚಿವರು ವಿವರಣೆ ನೀಡಿದರು.
ಓಲಾ, ಊಬರ್ ಪ್ರಯಾಣಿಕರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ!
'ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಕಳೆದ ಮೂರು ವರ್ಷದಲ್ಲಿ ಪರಿಶಿಷ್ಟ ಜಾತಿಯ 554 ಹಾಗೂ ಪರಿಶಿಷ್ಟ ಪಂಗಡದ 143 ಫಲಾನುಭವಿಗಳಿಗೆ ಕಾರು ಸಾಲ ಸೌಲಭ್ಯ ಯೋಜನೆಯ ಲಾಭವನ್ನು ಒದಗಿಸಲಾಗಿದೆ' ಎಂದರು.
ಶಾಸಕ ಆಚಾರ್ ಹಾಲಪ್ಪ ಬಸಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ಇರುವ ಪರಿಶಿಷ್ಟ ಪಂಗಡಗಳಿಗೆ ಸೇರಿದ ಆದಿವಾಸಿ ಸಮುದಾಯಗಳಿಗಾಗಿ 2018-19ನೇ ಸಾಲಿನಿಂದ ಜಾರಿಗೆ ಬರುವಂತೆ ನವಗ್ರಾಮ ನಿರ್ಮಾಣ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ಈಗಾಗಲೇ ಗ್ರಾಮಗಳ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ' ಎಂದು ಅವರು ತಿಳಿಸಿದರು.
'ಈ ಯೋಜನೆಯಡಿಯಲ್ಲಿ ಗ್ರಾಮಗಳಿಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ, ಒಳಚರಂಡಿ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ, ಕಾಲೋನಿಗಳ ಸಂಪರ್ಕ ರಸ್ತೆ ನಿರ್ಮಾಣ, ವಿದ್ಯುತ್ ಸಂಪರ್ಕ, ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು' ಎಂದರು.