ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ : ಸಿಎಂ
ಬೆಳಗಾವಿ, ಸೆಪ್ಟೆಂಬರ್ 16 : 'ಮಹದಾಯಿ ಹೋರಾಟಗಾರರ ಮೇಲಿನ ಕೇಸ್ಗಳನ್ನು ಶೀಘ್ರವೇ ಹಿಂಪಡೆಯಲಾಗುವುದು. ಮಹದಾಯಿ ನೀರನ್ನು ಯಾವ ರೀತಿ ಉಪಯೋಗಿಸಬೇಕು ಎಂದು ರಾಜ್ಯದ ನೀರಾವರಿ ತಜ್ಞರೊಂದಿಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಳಗಾವಿಯ ನೆಹರು ನಗರದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಭವನವನ್ನು ಎಚ್.ಡಿ.ಕುಮಾರಸ್ವಾಮಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿ 'ನೂತನವಾಗಿ ನಿರ್ಮಾಣವಾಗಿರುವ ಕನ್ನಡ ಭವನದಲ್ಲಿ ಇನ್ನೂ ಕೆಲವು ಕಾಮಗಾರಿ ಬಾಕಿ ಇದೆ ರೂ. 1.5 ಕೋಟಿ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡುವಂತೆ ಸಾಂಸ್ಕೃತಿಕ ಕನ್ನಡ ಭವನ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು' ಎಂದರು.
ಬೆಳಗಾವಿ : ಕುಮಾರಸ್ವಾಮಿ ಜನತಾ ದರ್ಶನ, ಹಲವು ಸಮಸ್ಯೆ ಪರಿಹಾರ
2006 ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕನ್ನಡ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಇಂದು ಈ ಭವನವನ್ನು ತಾವೇ ಉದ್ಘಾಟಿಸುತ್ತಿರುವುದನ್ನು ನೆನಪು ಮಾಡಿಕೊಂಡು ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ಕನ್ನಡ ಭಾಷೆ ಕಲಿಕೆ ಕಡ್ಡಾಯ: ಖಾಸಗಿ ಶಾಲೆಗಳಿಗೆ ಖಡಕ್ ಆದೇಶ
'ಕನ್ನಡ ಭವನದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಲಾವಿದರು ಹಾಗೂ ಸಾರ್ವಜನಿಕರು ಭವನವನ್ನು ಸದುಪಯೋಗಪಡಿಸಿಕೊಳ್ಳಬೇಕು' ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಕನ್ನಡದ ಕಂಪು ಪಸರಿಸಲಿ
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಂಸ್ಕೃತಿಕ ಕನ್ನಡ ಭವನ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ ಕೋರೆ ಅವರು, 'ಬೆಳಗಾವಿಯಲ್ಲಿ ಕನ್ನಡದ ಕಂಪು ಮತ್ತಷ್ಟು ಪಸರಿಸಲು ಕನ್ನಡ ಭವನ ಸಹಕಾರಿಯಾಗಲಿದೆ. ಕನ್ನಡ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಪುಸ್ತಕಗಳ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ' ಎಂದರು.
ಸಾಲ ಮನ್ನಾದಿಂದ ತೊಂದರೆಯಿಲ್ಲ
'ಸರ್ಕಾರ ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿದೆ. ಸಾಲಮನ್ನಾ ಮಾಡಿದ ಹಣಕ್ಕೂ ಇಲಾಖೆಗಳ ಕಾರ್ಯಕ್ರಮಗಳಿಗೆ ಮೀಸಲಿರಿಸಿರುವ ಹಣಕ್ಕೂ ಯಾವುದೇ ಸಂಬಂಧವಿಲ್ಲ. ಸಾಲಮನ್ನಾದಿಂದ ಸರ್ಕಾರದ ಯಾವುದೇ ಯೋಜನೆಗಳಿಗೆ ತೊಂದರೆಯಾಗಿಲ್ಲ' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ರೈತರಿಗೆ ತೊಂದರೆ ನೀಡಬೇಡಿ
'ಕೆಲವು ಬ್ಯಾಂಕ್ನವರು ರೈತರಿಗೆ ಸಾಲ ಪಡೆದುಕೊಂಡ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಬ್ಯಾಂಕ್ನವರು ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು' ಎಂದು ಕುಮಾರಸ್ವಾಮಿ ಸೂಚನೆ ನೀಡಿದರು.
'ಸರ್ಕಾರದಿಂದ ಘೋಷಣೆ ಮಾಡಿರುವ ರಾಷ್ಟ್ರೀಕೃತ ಬ್ಯಾಂಕ್ಗಳ 35 ಸಾವಿರ ಕೋಟಿ ಸಾಲವನ್ನು 4 ವರ್ಷಗಳಲ್ಲಿ ಕಂತುಗಳ ಮೂಲಕ ಪೂರೈಸಬೇಕೆಂದು ಚರ್ಚೆ ಮಾಡಲಾಗಿತ್ತು. ಆದರೆ, ಬರುವ ಜುಲೈನೊಳಗೆ ಎಲ್ಲ ಹಣವನ್ನು ಬ್ಯಾಂಕ್ಗಳಿಗೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬ್ಯಾಂಕ್ನವರು ಸರ್ಕಾರಕ್ಕೆ ಸಹಕಾರ ನೀಡಬೇಕು' ಎಂದರು.
ಸುವರ್ಣಸೌಧಕ್ಕೆ ಇಲಾಖೆ ಸ್ಥಳಾಂತರ
'ಬೆಳಗಾವಿಯಲ್ಲಿ ವಿಧಾನಸಭೆಯ ಕಲಾಪಗಳು ನಡೆಬೇಕೆಂಬ ಉದ್ದೇಶದಿಂದ ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪ್ರಥಮ ಬಾರಿಗೆ ಇಲ್ಲಿ ಕಲಾಪವನ್ನು ಏರ್ಪಡಿಸಿದ್ದೆ. ಸುವರ್ಣಸೌಧ ವರ್ಷದ 365 ದಿನವೂ ಕಾರ್ಯನಿರ್ವಹಿಸಬೇಕೆಂದು ನಾನು ಕೂಡ ಆಶಿಸುತ್ತಿದ್ದೇನೆ. ಈ ಬಗ್ಗೆ ಶೀಘ್ರ ಸರ್ಕಾರದ ಎಲ್ಲ ಪ್ರತಿನಿಧಿಗಳೊಂದಿಗೆ ಚರ್ಚಿಸಿ, ಇಲಾಖೆಗಳ ಸ್ಥಳಾಂತರ ಮಾಡಲಾಗುತ್ತದೆ' ಎಂದು ಕುಮಾರಸ್ವಾಮಿ ಅವರು ಹೇಳಿದರು.
ಉತ್ಪಾದನಾ ವಲಯಕ್ಕೆ ಒತ್ತು
'ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ಪಾದನಾ ವಲಯವನ್ನು ನಿರ್ಮಿಸಲು ಹೆಚ್ಚಿನ ಒತ್ತು ನೀಡಲಾಗುವುದು. ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಎಲ್ಲ ಜಿಲ್ಲೆಗಳ ಅಭಿವೃದ್ಧಿಗೂ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಸರ್ಕಾರದ ಕುರಿತ ಅಪಪ್ರಚಾರಕ್ಕೆ ಯಾರು ಕೂಡ ಕಿವಿಗೊಡಬಾರದು' ಎಂದು ಮನವಿ ಮಾಡಿದರು.
ಬೆಳಗಾವಿ ಜಿಲ್ಲೆಯ ಒಡನಾಟ
'ಬೆಳಗಾವಿ ಜಿಲ್ಲೆಯಿಂದಲೇ 2006 ರಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಆರಂಭಿಸಿದ್ದೆ. ಈ ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 19 ಬಾರಿ ಬೆಳಗಾವಿಗೆ ಭೇಟಿ ನೀಡಿದ್ದೆ. ಇಲ್ಲಿಯೇ ವಿಧಾನಸಭೆ ಕಲಾಪಗಳನ್ನು ಆರಂಭಿಸಿದ್ದೆ. ಕನ್ನಡ ಭವನಕ್ಕೂ ಶಂಕುಸ್ಥಾಪನೆ ನೆರವೇರಿಸಿದ್ದೆ. ಬೆಳಗಾವಿ ಜಿಲ್ಲೆಯೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದು, ಅವಿನಾಭಾವ ಸಂಬಂಧವನ್ನು ಹೊಂದಿದ್ದೇನೆ' ಎಂದು ಮುಖ್ಯಮಂತ್ರಿಗಳು ನೆನಪು ಮಾಡಿಕೊಂಡರು.