ಶೀಘ್ರದಲ್ಲೇ ಜೆಡಿಎಸ್ ಸೇರುತ್ತೇನೆ : ಎ.ಎಸ್.ಪಾಟೀಲ ನಡಹಳ್ಳಿ
Recommended Video
ಬೆಳಗಾವಿ, ಅಕ್ಟೋಬರ್ 23 : 'ಶೀಘ್ರದಲ್ಲೇ ಜೆಡಿಎಸ್ ಪಕ್ಷ ಸೇರಲಿದ್ದೇನೆ. 2018ರ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ 50 ಜೆಡಿಎಸ್ ಶಾಸಕರು ವಿಧಾನಸಭೆ ಪ್ರವೇಶ ಮಾಡಲಿದ್ದಾರೆ' ಎಂದು ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲು ಚಿಕ್ಕೋಡಿಗೆ ಆಗಮಿಸಿದ್ದ ಶಾಸಕ ಎ.ಎಸ್.ನಡಹಳ್ಳಿ ಅವರು ಚಿಕ್ಕೋಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಕಾಂಗ್ರೆಸ್ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದು, ಅವರು ಜೆಡಿಎಸ್ ಸೇರಲಿದ್ದಾರೆ.
ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕಾಂಗ್ರೆಸ್ನಿಂದ ಉಚ್ಚಾಟನೆ
'ನೀರಾವರಿ ಯೋಜನೆಗಳನ್ನು ಯಶಸ್ವಿಗೊಳಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. 2007ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ 1557 ಕೋಟಿ ರೂ. ಹಣವನ್ನು ನಂಜುಂಡಪ್ಪ ವರದಿಯನ್ನು ಅನುಷ್ಠಾನಕ್ಕೆ ತರಲು ಬಿಡುಗಡೆ ಮಾಡಿದ್ದರು' ಎಂದರು.
ಜೆಡಿಎಸ್ ಸೇರಲಿದ್ದಾರೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ!
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಉತ್ತರ ಕರ್ನಾಟಕದ ಅಬಿವೃದ್ಧಿ ಮಾಡಲಿ, ಆದರೆ, ಪ್ರತ್ಯೇಕ ರಾಜ್ಯದ ಕೂಗೂ ನನ್ನಿಂದ ಇಲ್ಲ. ಅಬಿವೃದ್ಧಿಯ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.
'ಅಧಿವೇಶನದಲ್ಲಿ ಚರ್ಚೆ'
'ನ.14ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದಕ್ಕಾಗಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದೇನೆ. ಈಗಾಗಲೇ ನಾನು ಕುಮಾರಸ್ವಾಮಿಯವರ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇನೆ' ಎಂದರು.
ಕಾಂಗ್ರೆಸ್ನಿಂದ ಉಚ್ಚಾಟನೆ
ಹಲವು ಬಾರಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಅವರು ಈಗ ಜೆಡಿಎಸ್ ಸೇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
'2018ರ ಚುನಾವಣೆಗೆ ಸ್ಪರ್ಧೆ'
ಎ.ಎಸ್.ಪಾಟೀಲ ನಡಹಳ್ಳಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ.
'ಪಾಟೀಲ್ ಒತ್ತಾಯಿಸಿದ್ದರು'
ಬಿಬಿಎಂಪಿ ವಿಭಜನೆ ಕುರಿತು ಚರ್ಚಿಸಲು ಸರ್ಕಾರ ವಿಶೇಷ ವಿಧಾನಮಂಡಲ ಅಧಿವೇಶನ ಕರೆದಾಗ, 'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ವಿಶೇಷ ಅಧಿವೇಶನ ನಡೆಸಿ ನಿರ್ಣಯ ಕೈಗೊಳ್ಳಬೇಕು' ಎಂದು ಎ.ಎಸ್.ಪಾಟೀಲ ನಡಹಳ್ಳಿ ಒತ್ತಾಯಿಸಿದ್ದರು.