ಅನಂತಕುಮಾರ್ ಹೆಗಡೆ ಕಾರು ತಡೆದು, ದಲಿತ ಸಂಘಟನೆಗಳಿಂದ ಕಪ್ಪು ಬಾವುಟ
ಬೆಳಗಾವಿ, ಜನವರಿ 8: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ವಿವಿಧ ದಲಿತ ಸಂಘಟನೆಗಳ ಸದಸ್ಯರು ಸೋಮವಾರ ಕಪ್ಪು ಬಾವುಟ ಪ್ರದರ್ಶಿಸಿದರು.
ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಸಚಿವ ಅನಂತಕುಮಾರ್ ಆಗಮಿಸಿದ್ದರು. ಈ ಸಮಯದಲ್ಲಿ ಸ್ಥಳಕ್ಕೆ ಬಂದ ದಲಿತ ಸಂಘಟನೆಗಳ ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿ, ಅನಂತಕುಮಾರ್ ಹೆಗಡೆ ವಿರುದ್ಧ ಘೋಷಣೆಗಳನ್ನು ಕೂಗಿದರು.
ದಲಿತ ಸಂಘಟನೆಗಳ ಸದಸ್ಯರು ಅನಂತಕುಮಾರ್ ಹೆಗಡೆ ಕಾರು ತಡೆದು ಘೋಷಣೆಗಳನ್ನು ಕೂಗಿದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಾನಿರತರನ್ನು ಬಂಧಿಸಿ ಕರೆದೊಯ್ದರು. ಹೆಚ್ಚಿನ ಸಂಖ್ಯೆಯಲ್ಲಿದ್ದ ದಲಿತ ಪರ ಸಂಘಟನೆಗಳ ಸದಸ್ಯರನ್ನು ಬಂಧಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಅನಂತಕುಮಾರ್ ಹೆಗಡೆ ಇತ್ತೀಚೆಗೆ ಸಂವಿಧಾನ ಬದಲಿಸುವ ಸಲುವಾಗಿಯೇ ನಾವು (ಬಿಜೆಪಿ) ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಆ ನಂತರ ಸಂಸತ್ ನಲ್ಲಿ ಈ ಹೇಳಿಕೆ ಬಗ್ಗೆ ಕ್ಷಮೆ ಕೂಡ ಕೇಳಿದ್ದರು. ಆದರೆ ಕೇಂದ್ರ ಸಚಿವರ ವಿರುದ್ಧ ರಾಜ್ಯಾದ್ಯಂತ ದಲಿತಪರ ಸಂಘಟನೆಗಳು ಪ್ರತಿಭಟನೆ ಮಾಡಿದ್ದವು.